ಬೆಂಗಳೂರು: ಸರ್ಕಾರಿ ಕಚೇರಿಗಳಿಗೆ ಭೇಟಿನೀಡುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಮತ್ತು ಜನರ ನಡುವೆ ತಾರತಮ್ಯ ಮಾಡದಂತೆ ರಾಜ್ಯ ಸರ್ಕಾರದ ನೌಕರರಿಗೆ ಸೂಚನೆ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.
ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರೊಂದಿಗೆ ಸರ್ಕಾರಿ ನೌಕರರು ಸೌಜನ್ಯದಿಂದ ವರ್ತಿಸುತ್ತಿಲ್ಲ ಮತ್ತು ಆಸೀನರಾಗಲು ಕುರ್ಚಿ ಒದಗಿಸುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಹಾಪುರ ತಾಲ್ಲೂಕಿನ ಬೊಮ್ಮನಹಳ್ಳಿಯ ಸಿದ್ದಣ್ಣ ಎಂಬುವವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಸುತ್ತೋಲೆ ಹೊರಡಿಸಲಾಗಿದೆ.
‘ಸಾರ್ವಜನಿಕರು ತಮ್ಮ ಸಮಸ್ಯೆಯ ಕುರಿತು ವ್ಯವಹರಿಸಲು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾವುದೇ ತಾರತಮ್ಯ ಮಾಡದೆ ಬಂದವರೆಲ್ಲರಿಗೂ ಕುರ್ಚಿಗಳಲ್ಲಿ ಕುಳಿತುಕೊಳ್ಳುವಂತೆ ಹೇಳಬೇಕು’ ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿ. ಈ ವಿಚಾರದಲ್ಲಿ ತಮ್ಮ ಅಧೀನದಲ್ಲಿರುವ ಎಲ್ಲ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಸೂಚನೆ ನೀಡುವಂತೆ ವಿವಿಧ ಇಲಾಖೆಗಳು, ನಿಗಮ, ಮಂಡಳಿಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.