ADVERTISEMENT

Belagavi Session | ಕನ್ನಡ ಶಾಲೆ ಮುಚ್ಚುವುದಿಲ್ಲ: ಮಧು ಬಂಗಾರಪ್ಪ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 14:36 IST
Last Updated 8 ಡಿಸೆಂಬರ್ 2025, 14:36 IST
<div class="paragraphs"><p>ಮಧು ಬಂಗಾರಪ್ಪ</p></div>

ಮಧು ಬಂಗಾರಪ್ಪ

   

ಸುವರ್ಣ ವಿಧಾನಸೌಧ (ಬೆಳಗಾವಿ): ‘ಕನ್ನಡ ನಮ್ಮ ರಕ್ತದಲ್ಲಿಯೇ ಇದೆ. ಒಂದೇ ಒಂದು ಮಗು ದಾಖಲಾಗಿದ್ದರೂ ರಾಜ್ಯದಲ್ಲಿನ ಯಾವ ಕನ್ನಡ ಶಾಲೆಯನ್ನೂ ಮುಚ್ಚುವುದಿಲ್ಲ’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. 

ವಿಧಾನಪರಿಷತ್‌ನಲ್ಲಿ ಬಿಜೆಪಿಯ ಚಿದಾನಂದ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘900 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಬಡವರು, ಪರಶಿಷ್ಟರು, ಹಿಂದುಳಿದ ವರ್ಗಗಳ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವುದು ಸರ್ಕಾರದ ಉದ್ದೇಶ. ಅದಕ್ಕಾಗಿ ಕೆಪಿಎಸ್‌ ಬಲಪಡಿಸಲಾಗುತ್ತಿದೆ. ದೂರದ ಗ್ರಾಮಗಳಿಂದ ಬರುವ ಮಕ್ಕಳಿಗೆ ಬಿಸಿಯೂಟ, ಉಚಿತ ಪಠ್ಯಪುಸ್ತಕಗಳ ಜತೆಗೆ ಬಸ್‌ ಸೌಕರ್ಯವನ್ನೂ ಕಲ್ಪಿಸಲಾಗುತ್ತಿದೆ’ ಎಂದರು.

ADVERTISEMENT

ಪ್ರಸ್ತುತ ಇರುವ 309 ಕೆಪಿಎಸ್‌ಗಳಲ್ಲಿ 2,72,464 ವಿದ್ಯಾರ್ಥಿಗಳು ಇದ್ದಾರೆ. ಪ್ರತಿ ಗ್ರಾಮ ಪಂಚಾಯಿತಿಗೂ ಒಂದು ಕೆಪಿಎಸ್‌ ಸ್ಥಾಪಿಸಲಾಗುವುದು. ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಖಾಲಿ ಹುದ್ದೆಗಳನ್ನು ಆದ್ಯತೆ ಮೇಲೆ ಭರ್ತಿ ಮಾಡಲಾಗುವುದು ಎಂದು ಹೇಳಿದರು.

ಉತ್ತಮ ಕಲಿಕೆ, ಉಜ್ವಲ ಭವಿಷ್ಯ ಎಂಬುದು ಧ್ಯೇಯ ವಾಕ್ಯವಾಗಿದ್ದು, ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಗಿ ಕಲಿಯಬೇಕು ಎಂಬ ಆಶಯದಿಂದ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು ಏಕರೂಪದ ನೀತಿಯನ್ನು ಪಾಲಿಸುವಂತೆ ‘ಕರ್ನಾಟಕ ಪಬ್ಲಿಕ್ ಶಾಲಾ ಮಾನದಂಡ ಕೈಪಿಡಿ’ ಸಿದ್ಧಪಡಿಸಲಾಗಿದೆ. ಅದರಲ್ಲಿ ನಿಗದಿಪಡಿಸಿರುವ ಗುಣಮಟ್ಟದ ನಿಯಮದಂತೆ ಪ್ರತಿ ಶಾಲೆಯಲ್ಲೂ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶೈಕ್ಷಣಿಕ ಮತ್ತು ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.