ADVERTISEMENT

ಬೇಲೆಕೇರಿ ಗಣಿ ಅಕ್ರಮ | ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಿ: ಹರಿಪ್ರಸಾದ್

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2024, 7:45 IST
Last Updated 7 ಡಿಸೆಂಬರ್ 2024, 7:45 IST
ಬಿ.ಕೆ. ಹರಿಪ್ರಸಾದ್
ಬಿ.ಕೆ. ಹರಿಪ್ರಸಾದ್   

ಬೆಂಗಳೂರು: 'ಬೇಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಅನುಸಾರ ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಬೇಕು. ಈ ಪ್ರಕಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಬೇಕು' ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, 'ಬೇಲೆಕೇರಿ ಅಕ್ರಮ ಅದಿರು ಕಳ್ಳ ಸಾಗಾಣೆ ಪ್ರಕರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 8,05,991.083 ಟನ್ ಅಕ್ರಮ ಅದಿರನ್ನು ಮುಟ್ಟುಗೋಲು ಹಾಕಿಕೊಂಡಿದ್ದರು. ಈ ಅದಿರನ್ನು ಅದಾನಿ ಕಂಪನಿಯವರು ದೊಡ್ಡ ಪ್ರಮಾಣದಲ್ಲಿ ಕಳ್ಳಸಾಗಣೆ ಮಾಡಿದ್ದಾರೆ. ಅದರಲ್ಲಿ ಮಲ್ಲಿಕಾರ್ಜುನ ಶಿಪ್ಪಿಂಗ್, ಅದಾನಿ ಎಂಟರ್ ಪ್ರೈಸಸ್, ಸಲ್ಗಾಂವಕರ್ ಮೈನಿಂಗ್ ಇಂಡಸ್ಟ್ರಿ ಮತ್ತು ರಾಜ್ ಮಹಲ್ ಕಂಪನಿಗಳು ಈ ಅದಿರನ್ನು ವಿದೇಶಕ್ಕೆ ಕಳ್ಳಸಾಗಣೆ ಮಾಡಿರುವುದು ಲೋಕಾಯುಕ್ತ ತನಿಖೆಯಲ್ಲಿ ಪತ್ತೆಯಾಗಿತ್ತು. ಎಲ್ಲಾ ಕಂಪನಿಗಳ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆಯೂ ಲೋಕಾಯುಕ್ತ ಶಿಫಾರಸು ಮಾಡಿತ್ತು. ಅದಾನಿ ಕಂಪನಿ ಹೊರತಾಗಿ ಇತರೆ ಮೂರು ಕಂಪನಿ ವಿರುದ್ಧ ಸಿಬಿಐ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಂಡು ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಸದ್ಯ ಈ ಶಿಕ್ಷೆಯನ್ನು ಹೈಕೋರ್ಟ್ ಅಮಾನತಿನಲ್ಲಿಟ್ಟಿದೆ.

ಆದರೆ, ಈ ಮೂರು ಕಂಪನಿಗಳಿಗಿಂತ ಘೋರ ಆರೋಪ ಎದುರಿಸುತ್ತಿರುವ ಅದಾನಿ ಕಂಪನಿ ವಿರುದ್ಧ ಯಾವುದೇ ತನಿಖೆ ನಡೆಯುತ್ತಿಲ್ಲ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಿಗೆ ಅದಾನಿ ಕಂಪನಿ ಲಂಚ ನೀಡಿ ಈ ಅಕ್ರಮ ಅದಿರು ಸಾಗಣೆ ಮಾಡುತ್ತಿತ್ತು ಎಂಬ ಆರೋಪದ ಬಗ್ಗೆ ವಿಚಾರಣೆ ನಡೆದಿಲ್ಲ. ಲೋಕಾಯುಕ್ತರು ಅದಾನಿ ಕಂಪನಿ ಕಂಪ್ಯೂಟರ್ ವಶಪಡಿಸಿಕೊಂಡಾಗ ಅದರಲ್ಲಿ ಕಂಪನಿಯವರು ಈ ಶಾಖೆಗೆ ಕಳುಹಿಸಿರುವ ಮೇಲ್‌ನಲ್ಲಿ ಯಾವ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರಿಗೆ ಹಣ ನೀಡಬೇಕು ಎಂಬ ವಿವರಗಳು ಇರುತ್ತವೆ ಎಂದು ಲೋಕಾಯುಕ್ತ ವರದಿಯ 51ನೇ ಪುಟದಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದರೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ.

ADVERTISEMENT

ಈ ಪ್ರಕರಣದಲ್ಲಿ ಬೇರೆ ಕಂಪನಿಗಳ ವಿರುದ್ಧ ಲೋಕಾಯುಕ್ತ ಹಾಗೂ ಸಿಬಿಐ ಸಂಸ್ಥೆಗಳು ಕ್ರಮ ಕೈಗೊಂಡಿರುವ ರೀತಿಯಲ್ಲಿ ಅದಾನಿ ಕಂಪನಿ ವಿರುದ್ಧವೂ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಅದಾನಿ ಕಂಪನಿ ಮೋದಿ ಅವರ ಕೃಪಾಪೋಷಿತ ಕಂಪನಿಯಾಗಿದ್ದು, ದೇಶದಲ್ಲಿ ಏನೇ ಅವ್ಯವಹಾರ ಮಾಡಿದರೂ ಈ ಕಂಪನಿ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಹೀಗಾಗಿ ಕರ್ನಾಟಕ ರಾಜ್ಯದಲ್ಲಿ ತನಿಖೆಯಾಗಿರುವ ವರದಿ ಮೇಲೆ ಕ್ರಮ ಕೈಗೊಳ್ಳಬೇಕು.

ಅದಾನಿ ಕಂಪನಿ ಸಮೂಹ ಕರ್ನಾಟಕ ರಾಜ್ಯದ ಸಂಪತ್ತನ್ನು ಕಳ್ಳಸಾಗಣೆ ಮಾಡುವಾಗ ಅರಣ್ಯ ಇಲಾಖೆಗಳು ಮುಟ್ಟುಗೋಲು ಹಾಕಿಕೊಂಡಿರುವುದು ಸ್ಪಷ್ಟವಾಗಿದೆ. ಈ ಕಂಪನಿಗಳ ವಿರುದ್ಧ ಲೋಕಾಯುಕ್ತ ವರದಿಯಂತೆ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಯಲ್ಲಿ ಒತ್ತಾಯಿಸುತ್ತೇನೆ. ಅಮೆರಿಕದಲ್ಲಿ ಅದಾನಿ ಅವರ ಮೇಲೆ ಪ್ರಕರಣ ದಾಖಲಿಸುವಾಗ ರಾಜ್ಯದಲ್ಲಿ ನಮ್ಮ ಸಂಪತ್ತು ಲೂಟಿ ಮಾಡಿರುವ ಪ್ರಕರಣವನ್ನು ಮುಟ್ಟದಿದ್ದರೆ ಎಲ್ಲರ ಮೇಲೂ ಸಂಶಯ ಬರುವಂತಾಗುತ್ತದೆ. ಈ ಪ್ರಕರಣದಲ್ಲಿ ಭಾಗಿಯಾದವರು ಎಷ್ಟೇ ದೊಡ್ಡವರಿದ್ದರೂ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.