
ಬೆಂಗಳೂರು: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ತಿಂಗಳ ಹಿಂದೆ ನಡೆದಿದ್ದ ₹7.11 ಕೋಟಿ ದರೋಡೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, 56ನೇ ಸಿಸಿಎಚ್ ನ್ಯಾಯಾಲಯಕ್ಕೆ 1,328 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಪೊಲೀಸ್ ಕಾನ್ಸ್ಟೆಬಲ್ ಅಣ್ಣಪ್ಪ ನಾಯ್ಕ ಸೇರಿದಂತೆ 9 ಮಂದಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ಗೊತ್ತಾಗಿದೆ.
‘ಪ್ರಕರಣದ ಎಲ್ಲಾ ಆರೋಪಿಗಳು ಪರಸ್ಪರ ಸಂಚು ರೂಪಿಸಿ ಸಿಎಂಎಸ್ ವಾಹನದಲ್ಲಿ ಎಟಿಎಂ ಕೇಂದ್ರಕ್ಕೆ ತುಂಬಲು ಕೊಂಡೊಯ್ಯುತ್ತಿದ್ದ ಹಣವನ್ನು ದರೋಡೆ ಮಾಡಿರುವುದು ತನಿಖೆ ವೇಳೆ ಕಂಡುಬಂದಿದೆ. ಆರೋಪಿಗಳು ಮಾಡಿದ್ದ ಸಾಲ ತೀರಿಸಲು ಹಾಗೂ ಐಷಾರಾಮಿ ಜೀವನಕ್ಕಾಗಿ ಹಣ ದರೋಡೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ’ ಎಂದು ಮೂಲಗಳು ತಿಳಿಸಿವೆ.
2025ರ ನ.19ರಂದು ಆರ್ಬಿಐ ಅಧಿಕಾರಿ ಸೋಗಿನಲ್ಲಿ ಡೇರಿ ವೃತ್ತದ ಮೇಲ್ಸೇತುವೆಯಲ್ಲಿ ಎಟಿಎಂಗೆ ಸಾಗಿಸುವ ವಾಹನ ಅಡ್ಡಗಟ್ಟಿದ್ದ ಆರೋಪಿಗಳು, ಅದರಲ್ಲಿದ್ದ ಹಣ ದರೋಡೆ ಮಾಡಿ ಪರಾರಿ ಆಗಿದ್ದರು.
ಚೆನ್ನೈ, ಆಂಧ್ರ ಪ್ರದೇಶ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ಪ್ರಕರಣದ ಪ್ರಮುಖ ಆರೋಪಿ ಗೋವಿಂದಪುರ ಠಾಣೆ ಕಾನ್ಸ್ಟೆಬಲ್ ಅಣ್ಣಪ್ಪನಾಯ್ಕ, ಸಿಎಂಎಸ್ ಏಜೆನ್ಸಿ ಮಾಜಿ ಉದ್ಯೋಗಿ ಕ್ಸೇವಿಯರ್, ಸಹಚರರಾದ ರವಿ, ನೆಲ್ಸನ್ , ಗೋಪಾಲ್, ಮಂಜುನಾಥ್ ಸೇರಿದಂತೆ 9 ಮಂದಿಯನ್ನು ಬಂಧಿಸಿದ್ದರು.
ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಮತ್ತು ಜಯನಗರ ಎಸಿಪಿ ವಿ.ನಾರಾಯಣಸ್ವಾಮಿ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಇದೀಗ ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಆರೋಪಿಗಳ ವಿರುದ್ಧ ದರೋಡೆ, ಅಕ್ರಮ ತಡೆ, ಸಾಕ್ಷ್ಯ ನಾಶಪಡಿಸುವುದು, ಅಪರಾಧದ ಒಳಸಂಚು, ಬೆದರಿಕೆ ಹಾಕುವುದು ಸೇರಿ ಬಿಎನ್ಎಸ್ನ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ತಾಂತ್ರಿಕ ಸಾಕ್ಷ್ಯ ಹಾಗೂ ಬೆರಳಚ್ಚು ಸೇರಿದಂತೆ ಇತರೆ ವೈಜ್ಞಾನಿಕ ಸಾಕ್ಷ್ಯ ಒಳಗೊಂಡಂತೆ ಒಟ್ಟು 129 ಸಾಕ್ಷ್ಯಾಧಾರಗಳನ್ನು ದೋಷಾರೋಪ ಪಟ್ಟಿಯಲ್ಲಿ ನಮೂದಿಸಲಾಗಿದೆ.
ಆರೋಪಿಗಳ ನಡುವೆ ನಡೆದ ಫೋನ್ ಕರೆಗಳ ವಿವರ, ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಸೇರಿದಂತೆ ಇತರೆ ತಾಂತ್ರಿಕ ಹಾಗೂ ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿತ್ತು ಎಂದು ಡಿಸಿಪಿ ಲೋಕೇಶ್ ಜಗಲಾಸರ್ ಹೇಳಿದರು.
ಅಣ್ಣಪ್ಪ ನಾಯ್ಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.