ಬೆಂಗಳೂರು: ಬಿಬಿಎಂಪಿ ಮೀಸಲಾತಿ ಪಟ್ಟಿ ಕುರಿತು ಬಿಜೆಪಿ ಮುಖಂಡರು ಅಸಮಾಧಾನ ವ್ಯಕ್ತಪಡಿದ್ದರ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಬಿಎಂಪಿ 243 ವಾರ್ಡ್ಗಳಿಗೆ ಮೀಸಲಾತಿಯನ್ನು ನಿಗದಿ ಮಾಡಿ ಕರಡು ಪಟ್ಟಿಯನ್ನು ರಾಜ್ಯ ಸರ್ಕಾರ ಬುಧವಾರ ತಡರಾತ್ರಿ ಅಧಿಸೂಚನೆ ಹೊರಡಿಸಿದೆ.
ಈ ಮೀಸಲಾತಿ ಪಟ್ಟಿ ಕುರಿತು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ‘ಪ್ರಜಾವಾಣಿ’ ವರದಿ ಮಾಡಿತ್ತು.
ಈ ವರದಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ಕೆಪಿಸಿಸಿ, ‘ಸೋಲಿನ ಭಯದಲ್ಲಿದ್ದ ಬಿಜೆಪಿ ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸಲು ಇಷ್ಟವೇ ಇರಲಿಲ್ಲ. ಕೋರ್ಟ್ ಒತ್ತಡಕ್ಕೆ ಮಣಿದು ಪಟ್ಟಿ ಬಿಡುಗಡೆ ಮಾಡಿದೆ’ ಎಂದು ಆರೋಪಿಸಿದೆ.
‘ಮೀಸಲಾತಿ ಪಟ್ಟಿಯು ಅವೈಜ್ಞಾನಿಕವಾಗಿದೆ ಎಂದು ಸ್ವತಃ ಬಿಜೆಪಿ ಮುಖಂಡರೇ ಆರೋಪಿಸುತ್ತಿದ್ದಾರೆ. ಈ ಸರ್ಕಾರಕ್ಕೆ ಭ್ರಷ್ಟೋತ್ಸವ ಬಿಟ್ಟರೆ ಬೇರೆ ಇನ್ಯಾವುದನ್ನೂ ಮಾಡಲು ಬರುವುದಿಲ್ಲ’ ಎಂದು ಟೀಕಿಸಿದೆ.
ಬಿಬಿಎಂಪಿ ಮೀಸಲಾತಿ ಪಟ್ಟಿಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಶುಕ್ರವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಬಿಬಿಎಂಪಿ ಚುನಾವಣೆ ಸಂಬಂಧ ಮೀಸಲಾತಿ ಪಟ್ಟಿ ಹೊರಡಿಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ್ದು, ಇದನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.