ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ ಬಳಿ ಶುಕ್ರವಾರ ಬೆಳಿಗ್ಗೆ ಕಾರೊಂದು ಬೆಂಕಿಗೆ ಆಹುತಿಯಾಗಿದೆ. ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದಿದೆ. ಇದರಿಂದ ಈ ಮಾರ್ಗದಲ್ಲಿ ಸ್ವಲ್ಪಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟೆಕಿ ಸಚಿನ್ ಅವರು ಕಾರಿನಲ್ಲಿ ಕೋರಮಂಗಲದಿಂದ ಗಂಗಾನಗರದಲ್ಲಿ ಇರುವ ಉಪ ನೋಂದಣಾಧಿಕಾರಿ ಕಚೇರಿಗೆ ಆಸ್ತಿ ನೋಂದಣಿಗಾಗಿ ತೆರಳುತ್ತಿದ್ದರು. ಅರಮನೆ ರಸ್ತೆಯ ವಿಂಡ್ಸರ್ ಮ್ಯಾನರ್ ಸೇತುವೆಯ ಸರ್ವೀಸ್ ರಸ್ತೆಯಲ್ಲಿ ಕಾರು ಸಾಗುತ್ತಿರುವಾಗ ಎಂಜಿನ್ನಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿತ್ತು. ಚಾಲಕ ತಕ್ಷಣವೇ ಅಪಾಯ ಅರಿತು ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಸಚಿನ್ ಹಾಗೂ ಚಾಲಕ ಇಬ್ಬರೂ ಕಾರಿನಿಂದ ಇಳಿದಿದ್ದರು. ಚಾಲಕ ಕಾರಿನ ಮುಂದಿನ ಬಾನೆಟ್ ತೆಗೆಯುತ್ತಿದ್ದಂತೆಯೇ ಬೆಂಕಿ ಆವರಿಸಿದ್ದರಿಂದ ಅವರು ಹಿಂದೆ ಸರಿದಿದ್ದರು. ಸಚಿನ್ ಅವರು ಕಾರಿನಲ್ಲಿದ್ದ ದಾಖಲೆ ಮತ್ತು ಕೆಲ ವಸ್ತುಗಳನ್ನು ಹೊರಗೆ ತೆಗೆದುಕೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ಧಾರೆ.
ಕಾರಿನ ಟೈರ್ ಮತ್ತು ಡೀಸೆಲ್ ಟ್ಯಾಂಕ್ ಸ್ಫೋಟವಾಗಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದರು.
ಸುಟ್ಟು ಹೋದ ಕಾರನ್ನು ರಸ್ತೆಯಿಂದ ತೆರವು ಗೊಳಿಸಿದ ಹೈಗ್ರೌಂಡ್ಸ್ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ಧಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.