ADVERTISEMENT

ಬೆಂಗಳೂರು ಪ್ರವಾಹ: ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2022, 4:03 IST
Last Updated 10 ಸೆಪ್ಟೆಂಬರ್ 2022, 4:03 IST
   

ಬೆಂಗಳೂರು: ರಾಜಧಾನಿ ವ್ಯಾಪ್ತಿಯ ಪ್ರದೇಶಗಳಲ್ಲಿ ಉಂಟಾಗಿರುವ ಪ್ರವಾಹ ಮತ್ತು ಅದಕ್ಕೆ ಕಾರಣರಾದವರ ಕುರಿತು ಶ್ವೇತಪತ್ರ ಹೊರಡಿಸುವಂತೆ ರಾಜ್ಯ ಸರ್ಕಾರವನ್ನು ಕಾಂಗ್ರೆಸ್‌ ಆಗ್ರಹಿಸಿದೆ.

ಪಕ್ಷದ ಹಲವು ನಾಯಕರೊಡನೆ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ, ‘ಬೆಂಗಳೂರು ನಗರದ ಈಗಿನ ದುಃಸ್ಥಿತಿಗೆ ಬಿಜೆಪಿಯ ದುರಾಡಳಿತವೇ ಕಾರಣ. ಹಿಂದಿನ 16 ವರ್ಷಗಳ ಅವಧಿಯಲ್ಲಿ 11 ವರ್ಷ ಬಿಜೆಪಿಯೇ ಆಡಳಿತ ನಡೆಸಿದೆ. ಈ ಅವಧಿಯಲ್ಲಿ ನಗರದ ಅಭಿವೃದ್ಧಿಯ ಕಡೆಗೆ ಗಮನ ಹರಿಸದೆ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದೇ ಬೆಂಗಳೂರಿನ ಹಲವು ಪ್ರದೇಶಗಳು ಪ್ರವಾಹದಲ್ಲಿ ಮುಳುಗಲು ಕಾರಣ’ ಎಂದರು.

ಪ್ರವಾಹ ಮತ್ತು ರಸ್ತೆ ಗುಂಡಿಗಳ ಕುರಿತು ಶ್ವೇತಪತ್ರ ಹೊರಡಿಸಬೇಕು. ಆ ಮೂಲಕ ಬಿಜೆಪಿಯ ದುರಾಡಳಿತ ದರ್ಶನ ಜನರಿಗೆ ಆಗಲಿ. ಸಮಸ್ಯೆ ಪರಿಹಾರಕ್ಕೆ ತಕ್ಷಣ ಸರ್ವಪಕ್ಷಗಳ ನಾಯಕರ ಸಭೆ ಕರೆದು ಚರ್ಚಿಸಬೇಕು. ಸಂತ್ರಸ್ತರಿಗೆ ತ್ವರಿತ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

‘ತಪ್ಪು ಮುಚ್ಚಿಕೊಳ್ಳಲು ಆರೋಪ’: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ‘ಬಿಜೆಪಿ ಸರ್ಕಾರದ ಅವಧಿಯ ತಪ್ಪುಗಳಿಂದಾಗಿಯೇ ಬೆಂಗಳೂರಿನಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ. ಈಗ ತಪ್ಪು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಮೂರು ವರ್ಷಗಳ ಬಿಜೆಪಿ ಆಡಳಿತದ ಅವಧಿಯಲ್ಲಿ ಏನು ಮಾಡಿದ್ದಾರೆ ಎಂಬುದನ್ನು ತೋರಿಸಲಿ’ ಎಂದು ಸವಾಲು ಹಾಕಿದರು.

ತಮ್ಮ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಾಜಕಾಲುವೆ ಒತ್ತುವರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿತ್ತು. 1,953 ಒತ್ತುವರಿ ಪ್ರಕರಣ ಗುರುತಿಸಿ, 1,300 ಸ್ಥಳಗಳಲ್ಲಿ ಒತ್ತುವರಿ ತೆರವುಗೊಳಿಸಲಾಗಿತ್ತು. 653 ಪ್ರಕರಣಗಳಲ್ಲಿ ಒತ್ತುವರಿ ತೆರವು ಬಾಕಿ ಇತ್ತು. ಈ ಒತ್ತುವರಿಗಳನ್ನು ತೆರವುಗೊಳಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿಲ್ಲ ಎಂದು ದೂರಿದರು.

‘ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ವಿಧಾನಮಂಡಲದ ಒಳಗೆ, ಹೊರಗೆ ಹೋರಾಟ ನಡೆಸುತ್ತೇವೆ’ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಶಾಸಕರಾದ ಡಾ.ಜಿ. ಪರಮೇಶ್ವರ, ಕೆ.ಜೆ. ಜಾರ್ಜ್‌ ಮಾತನಾಡಿದರು. ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್‌, ಧ್ರುವನಾರಾಯಣ, ರಾಜ್ಯಸಭಾ ಸದಸ್ಯ ನಾಸೀರ್‌ ಅಹ್ಮದ್‌, ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್‌ ಖರ್ಗೆ, ವಿಧಾನ ಪರಿಷತ್‌ ಸದಸ್ಯ ಅಲ್ಲಂ ವೀರಭದ್ರಪ್ಪ, ಮುಖಂಡ ಪ್ರೊ.ಎಂ.ವಿ. ರಾಜೀವ್‌ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.