ADVERTISEMENT

ಜ.8 ರಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚಾಲನೆ: ಸಿಎಂ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2018, 9:26 IST
Last Updated 1 ಡಿಸೆಂಬರ್ 2018, 9:26 IST
   

ಬೆಂಗಳೂರು: 'ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಜ. 8ರಂದು ಚಾಲನೆ ನೀಡಲಾಗುವುದು' ಎಂದು ಮುಖ್ಯಮಂತ್ರಿ ಎಚ್.ಡಿ‌. ಕುಮಾರಸ್ವಾಮಿ ಹೇಳಿದರು.

ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.

ಬೆಂಗಳೂರು - ಮೈಸೂರು ಷಟ್ಪಥ ರಸ್ತೆಗೆ (ಪ್ಯಾಕೇಜ್‌ 1) ಅರಣ್ಯ ಇಲಾಖೆಯ ಅನುಮತಿ ನೀಡುವ ಕಾರ್ಯ ಬಾಕಿ ಇದ್ದು, ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಹಾಗೂ ಬೆಂಗಳೂರು ಮೈಸೂರು ಪ್ಯಾಕೇಜ್‌ 2ಕ್ಕೆಸಂಬಂಧಿಸಿದ ಕೆಆರ್‌ಡಿಸಿಎಲ್‌ ಭೂಮಿ ಡಿನೋಟಿಫಿಕೇಷನ್ ಮತ್ತು ಕಂದಾಯ ದಾಖಲೆಗಳ ಪರಿಷ್ಕರಣಾ ಕಾರ್ಯವನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಿಳಿಸಿದರು.

ADVERTISEMENT

ರಾಜ್ಯದಲ್ಲಿ ಒಟ್ಟು 7622 ಕಿ.ಮೀ. ಉದ್ದದ ರಸ್ತೆಯಿದ್ದು, ಈ ಪೈಕಿ 3348 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ರಾಜ್ಯದಲ್ಲಿದೆ. 1954 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ 516 ಕಿ.ಮೀ. ರಸ್ತೆ ನಿರ್ಮಾಣ ಕಾರ್ಯ ಹೊಸದಾಗಿ ಯೋಜಿಸಲಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆ ಶೇ 80 ರಷ್ಟು ಮುಗಿದಿದೆ. ಅರಣ್ಯ, ಇಂಧನ, ಕೆಆರ್‌ಡಿಸಿಎಲ್‌ ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ತುಮಕೂರು- ಶಿವಮೊಗ್ಗ ಪ್ಯಾಕೇಜ್ 1, 2, 3 , ಬೈರಾಪುರ ಚಳ್ಳಕೆರೆ ಪ್ಯಾಕೇಜ್ 2, ಬಳ್ಳಾರಿ ಬೈರಾಪುರ ಪ್ಯಾಕೇಜ್‌ 1 , ಚಳ್ಳಕೆರೆ ಹಿರಿಯುರು ಪ್ಯಾಕೇಜ್ 3 ಚತುಷ್ಪಥ ರಸ್ತೆ ಕಾಮಗಾರಿಗಳ ಅರಣ್ಯ ಇಲಾಖೆಯ ಅನುಮತಿ ತ್ವರಿತವಾಗಿ ನೀಡುವಂತೆ ಸೂಚಿಸಿದರು.

ಖಾಲಿ ಇರುವ ಸ್ಥಳಗಳಲ್ಲಿ ಭೂ ಸ್ವಾಧೀನ ಅಧಿಕಾರಿಗಳನ್ನು ತಕ್ಷಣವೇ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಆಶ್ರಯ ಯೋಜನೆಯಡಿ ಶೇಷಗಿರಿ ಹಳ್ಳಿ ಮತ್ತು ಹುಳ್ತಾರ್‌ ಅರಣ್ಯ ಪ್ರದೇಶದಲ್ಲಿ ಭೂಮಿ ಕಳೆದುಕೊಂಡವರಿಗೆ ರಾಜ್ಯ ಸರ್ಕಾರ ಪರ್ಯಾಯ ಭೂಮಿಯನ್ನು ಗುರುತಿಸಿದ್ದು, ಈ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ರಾಮನಗರ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಹಾನಿರ್ದೇಶಕ ಬಿ.ಎನ್.ಸಿಂಗ್, ಎನ್‌ಎಚ್‌ಎಐ ಸದಸ್ಯರಾದ ತಾವಡೆ, ಲೋಕೋಪಯೋಗಿ ಇಲಾಖೆಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್‌ಎನ್‌ ಪ್ರಸಾದ್, ಅರಣ್ಯ , ಇಂಧನ, ಕೆಆರ್‌ಡಿಸಿಎಲ್‌ ಇಲಾಖೆಗಳ ಮುಖ್ಯಸ್ಥರು, ಬೆಂಗಳೂರು, ರಾಮನಗರ, ಮಂಡ್ಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.