ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿರುವ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾ ಕಸ್ಟಡಿ ಅವಧಿ ಏಪ್ರಿಲ್ 22ರಂದು ಮುಕ್ತಾಯವಾಗಲಿದ್ದು, ಅವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಎನ್ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಮಾರ್ಚ್ 1ರಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು, ಮುಸಾವೀರ್ ಹಾಗೂ ತಾಹಾನನ್ನು ಏಪ್ರಿಲ್ 12ರಂದು ಬಂಧಿಸಿದ್ದರು. ಅವರಿಬ್ಬರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದರು.
‘ಇಬ್ಬರೂ ಶಂಕಿತರನ್ನು ಏಪ್ರಿಲ್ 12ರಿಂದ 22ರವರೆಗೆ ಕಸ್ಟಡಿಗೆ ಪಡೆಯಲಾಗಿದೆ. ಇಬ್ಬರನ್ನೂ ರಾಜ್ಯದ ಹಲವು ಸ್ಥಳಗಳಿಗೆ ಕರೆದೊಯ್ದು ಮಹಜರು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಶಂಕಿತರಿಂದ ಸಾಕಷ್ಟು ಮಾಹಿತಿ ಕಲೆ ಹಾಕಲಾಗಿದ್ದು, ಪುರಾವೆಗಳನ್ನೂ ಸಂಗ್ರಹಿಸಲಾಗಿದೆ. ಇವುಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದೆ’ ಎಂದು ತನಿಖಾ ಸಂಸ್ಥೆ ಮೂಲಗಳು ಹೇಳಿವೆ.
‘ಬಾಂಬ್ ಸ್ಫೋಟದಲ್ಲಿ ಮುಸಾವೀರ್ ಹಾಗೂ ತಾಹಾ ಪ್ರಮುಖ ಶಂಕಿತರು. ಸ್ಫೋಟದ ಸಂಚಿನಲ್ಲಿ ಹಲವರು ಭಾಗಿಯಾಗಿರುವ ಮಾಹಿತಿ ಈಗಾಗಲೇ ಲಭ್ಯವಾಗಿದೆ. ಈ ಪೈಕಿ ಹಲವರಿಗೆ ನೋಟಿಸ್ ನೀಡಿ ವಿಚಾರಣೆ ಸಹ ನಡೆಸಲಾಗುತ್ತಿದೆ’ ಎಂದು ತಿಳಿಸಿವೆ.
ತಮಿಳುನಾಡಿನಲ್ಲಿ ಶೋಧ:
‘ಸ್ಫೋಟಕ್ಕೂ ಮುನ್ನ ಮುಸಾವೀರ್ ಹಾಗೂ ತಾಹಾ ತಮಿಳುನಾಡಿನಲ್ಲಿ ಕೆಲ ದಿನ ವಾಸವಿದ್ದರು. ಅದೇ ಸ್ಥಳದಲ್ಲಿ ಅವರು ಕಚ್ಚಾ ಬಾಂಬ್ (ಐಇಡಿ) ತಯಾರಿಸಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪುರಾವೆಗಳನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.