ಬೆಂಗಳೂರು: ‘ಬೆಟ್ಟಿಂಗ್ ನಡೆಸುತ್ತಿದ್ದ ಆರೋಪ ಪ್ರಕರಣದಲ್ಲಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರ ಪ್ರಮುಖ ಪಾಲುದಾರ ಎಚ್.ಅನಿಲ್ ಗೌಡ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿರುವ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ ಮತ್ತು ‘ಅನಿಲ್ ಗೌಡ ವಿರುದ್ಧ ಯಾವುದೇ ಆತುರದ ಕ್ರಮ ಕೈಗೊಳ್ಳಬಾರದು’ ಎಂಬ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.
‘ಇ.ಡಿ ಅಧಿಕಾರಿಗಳು ನನಗೆ ಜಾರಿಗೊಳಿಸಿರುವ ಸಮನ್ಸ್ ರದ್ದುಪಡಿಸಬೇಕು’ ಎಂದು ಕೋರಿ ವಕೀಲರೂ ಆದ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಅವರ ಪುತ್ರ ಎಚ್.ಅನಿಲ್ ಗೌಡ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಚಿನ್ ಶಂಕರ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಕುರಿತಾದ ಆದೇಶವನ್ನು ಪ್ರಕಟಿಸಿತು.
‘ವೃತ್ತಿನಿರತ ವಕೀಲರಿಗೆ ಸಮನ್ಸ್ ನೀಡುವುದಕ್ಕೆ ಸಂಬಂಧಿಸಿದ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಅನಿಲ್ ಗೌಡ ಅವರು ಮಧ್ಯಂತರ ರಕ್ಷಣೆಗೆ ಅರ್ಹರಾಗಿದ್ದಾರೆ. ಹಾಗಾಗಿ, ಕಳೆದ ತಿಂಗಳ 24ರಂದು ಅನಿಲ್ ಗೌಡ ಅವರಿಗೆ ಇ.ಡಿ ಜಾರಿ ಮಾಡಿರುವ ಸಮನ್ಸ್ಗೆ ತಡೆ ನೀಡಲಾಗುತ್ತಿದೆ’ ಎಂದು ನ್ಯಾಯಪೀಠ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.