ಬ್ರಹ್ಮವಿದ್ಯಾನಗರ (ಹೊಸದುರ್ಗ): ತಾಲ್ಲೂಕಿನ ಬ್ರಹ್ಮವಿದ್ಯಾನಗರದ ಭಗೀರಥ ಗುರುಪೀಠದಲ್ಲಿ ಮೇ 23ರಂದು ಅಖಿಲ ಭಾರತ ಭಗೀರಥ ಜಯಂತ್ಯುತ್ಸವ, ಭಗೀರಥ ದೇಗುಲ, ರಂಗ ಮಂದಿರ, ಪ್ರಸಾದನಿಲಯ ಲೋಕಾರ್ಪಣೆ, ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.
ತಾಲ್ಲೂಕು ಉಪ್ಪಾರ ಸಂಘದಿಂದ ಮಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾಜದ ಮುಖಂಡರ ಸಭೆಯ ಸಾನ್ನಿಧ್ಯ ವಹಿಸಿದ್ದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರು ಈ ವಿಷಯ ತಿಳಿಸಿದರು.
‘ಕರ್ನಾಟಕ, ಬಿಹಾರ ಹಾಗೂ ಕೇರಳದ ರಾಜ್ಯಪಾಲರು, ಮುಖ್ಯಮಂತ್ರಿಗಳು, ಹಲವು ಸಚಿವರು, ಮಠಾಧೀಶರನ್ನು ಸಮಾವೇಶಕ್ಕೆ ಆಹ್ವಾನಿಸಲಾಗುವುದು. ಹಿಂದುಳಿದಿರುವ ಉಪ್ಪಾರ ಸಮಾಜದ ಅಭಿವೃದ್ಧಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ಕೊಡಬೇಕು ಎಂದು ಸಮಾವೇಶದಲ್ಲಿ ಹಕ್ಕೊತ್ತಾಯ ಮಂಡಿಸಲಾಗುವುದು. ಕಾಲಮಿತಿಯಲ್ಲಿ ಮೀಸಲಾತಿ ಕೊಡದಿದ್ದರೆ ಹೋರಾಟಕ್ಕೆ ಸಜ್ಜಾಗುತ್ತೇವೆ’ ಎಂದು ಎಚ್ಚರಿಕೆ ನೀಡಿದರು.
‘ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ನಿರ್ಮಾಣದ ಕಾಮಗಾರಿ ಮಠಕ್ಕೆ ಹೊಂದಿಕೊಂಡಂತೆ ನಡೆಯುತ್ತಿದೆ. ಬಂಡೆ ಸ್ಫೋಟಿಸುವಾಗ ಇಲ್ಲಿ ಅನೇಕ ಮನೆಗಳು ಬಿರುಕು ಬಿಟ್ಟಿವೆ. ಕೆಲವು ಮನೆಗಳು ನೆಲಕ್ಕುರುಳಿವೆ. ಹೀಗಾಗಿ ಬ್ರಹ್ಮವಿದ್ಯಾನಗರ ಗ್ರಾಮ ಸೇರಿ ಮಠದ ಅಭಿವೃದ್ಧಿಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ವಿಶೇಷ ಅನುದಾನ ನೀಡಬೇಕು’ ಎಂದು ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.