ಬೆಂಗಳೂರು: ಬೆಲೆ ಏರಿಕೆ ಕುರಿತು ಜನರಿಗೆ ಆಕ್ರೋಶವಿಲ್ಲ. ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಆಕ್ರೋಶವಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.
ಬುಧವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ವೇಳೆ ಬೆಲೆ ಏರಿಕೆ ಕುರಿತ ಪ್ರಶ್ನೆಗೆ ಸಿಟ್ಟಿನಿಂದ ಪ್ರತಿಕ್ರಿಯಿಸಿದ ಅವರು, 'ಎಲ್ಲಿದೆ ಬೆಲೆ ಏರಿಕೆ? ಜನರು ಪ್ರಶ್ನಿಸುತ್ತಿಲ್ಲ. ನೀವು ಮಾತ್ರ ಪ್ರಶ್ನಿಸುತ್ತಿದ್ದೀರಿ' ಎಂದರು.
ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನರಿಗೆ ಸಮಸ್ಯೆಯಾಗಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಅವಧಿಗಿಂತಲೂ ಈಗ ಜನರು ನೆಮ್ಮದಿಯಿಂದ ಇದ್ದಾರೆ. ಕಾಂಗ್ರೆಸ್ ಪಕ್ಷದವರು ಮಾತ್ರ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಉತ್ತರಿಸಿದರು.
ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಪೆಟ್ರೊಲಿಯಂ ಉತ್ಪನ್ನ ಖರೀದಿಗೆ ಮಾಡಿದ್ದ ಸಾಲವನ್ನು ಈಗಿಮ ಸರ್ಕಾರ ತೀರಿಸುತ್ತಿದೆ. ಹೀಗಾಗಿ ದರ ಹೆಚ್ಚಳ ಮಾಡಲಾಗುತ್ತಿದೆ ಎಂದರು.
ಸಾಲ ತೀರಿಸಿದ ಕುರಿತು ಮಾಹಿತಿ ಇಲ್ಲ ಎಂದ ಸಚಿವರು, ಪೆಟ್ರೊಲಿಯಂ ಸಚಿವಾಲಯ ತಮ್ಮ ವ್ಯಾಪ್ತಿಯಲ್ಲಿಲ್ಲ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.