
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಪುರಭವನದ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಪ್ರಜಾವಾಣಿ ಚಿತ್ರ: ಎಂ. ಎಸ್. ಮಂಜುನಾಥ್
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ, ನರೇಗಾ ಉಳಿಸಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಗುರುವಾರ ಮುಷ್ಕರ ನಡೆಸಿದವು.
ಐಎನ್ಟಿಯುಸಿ, ಎಐಟಿಯುಸಿ, ಎಚ್ಎಂಎಸ್, ಸಿಐಟಿಯು, ಎಐಯುಟಿಯುಸಿ, ಎಐಸಿಸಿಟಿಯು, ಟಿಯುಸಿಸಿ, ಎಚ್ಎಂಕೆಪಿ, ಕೆಡಬ್ಲ್ಯುಯು, ಕೆಐಇಇಎಫ್, ಎನ್ಸಿಎಲ್ ಸೇರಿದಂತೆ ದೇಶದ ಕೇಂದ್ರ ಕಾರ್ಮಿಕ ಸಂಘಗಳನ್ನು ಒಳಗೊಂಡ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಕರೆ ನೀಡಿದ್ದ ಮುಷ್ಕರವನ್ನು ಬೆಂಬಲಿಸಿ ರಾಜ್ಯದ ವಿವಿಧ ಕಾರ್ಖಾನೆಗಳ ಸಾವಿರಾರು ಕಾರ್ಮಿಕರು ಕೆಲಸದಿಂದ ಹೊರಗುಳಿದರು.
ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂತೆಗೆದುಕೊಳ್ಳಬೇಕು. ಮಾತ್ರವಲ್ಲ, ರೈತರ ಹಾಗೂ ಗ್ರಾಮೀಣ ಪ್ರದೇಶದ ಕೂಲಿಕಾರರ ಭವಿಷ್ಯವನ್ನು ಹಾಳು ಮಾಡಲಿರುವ ವಿಬಿ ಜಿ ರಾಮ್ ಜಿ ಕಾನೂನನ್ನು ಹಿಂಪಡೆಯಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
‘ಬೆಂಗಳೂರಿನ ಪುರಭವನದ ಬಳಿ ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಹೊರಟ ಕಾರ್ಮಿಕರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದು ಆಡುಗೋಡಿಯಲ್ಲಿರುವ ಪೊಲೀಸ್ ಕವಾಯತು ಮೈದಾನಕ್ಕೆ ಒಯ್ದರು. ಅಲ್ಲಿಯೇ ಸಭೆ ಮಾಡಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಮುಖಂಡರು ಚರ್ಚೆ ನಡೆಸಿದರು’ ಎಂದು ಜೆಸಿಟಿಯು ಸಮನ್ವಯಕಾರ ಕೆ.ವಿ. ಭಟ್ ತಿಳಿಸಿದರು.
ರಾಜ್ಯ ಎಲ್ಲ ಭಾಗಗಳಲ್ಲಿ ಮುಷ್ಕರ ಯಶಸ್ವಿಯಾಗಿದೆ. ಉದ್ಯಮಗಳ ಕಾರ್ಮಿಕರಲ್ಲದೇ ಅಂಗನವಾಡಿ, ಅಕ್ಷರ ದಾಸೋಹ, ಗ್ರಾಮ ಪಂಚಾಯಿತಿ ನೌಕರರು ಕೂಡ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದರು ಎಂದು ಸಿಐಟಿಯು ಅಧ್ಯಕ್ಷ ಮೀನಾಕ್ಷಿ ಸುಂದರಂ, ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮೀ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.