ಉಡುಪಿ: ರಾಹುಲ್ ಗಾಂಧಿ ಭಾರತ್ ಜೋಡೋ ಪಾದಯಾತ್ರೆ ಮಾಡಬೇಕಿರುವುದು ದೇಶದೊಳಗೆ ಅಲ್ಲ; ದೇಶ ವಿಭಜನೆಗೆ ಕಾರಣವಾದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು.
ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಪಾಕ್ ಆಕ್ರಮಿತ ಕಾಶ್ಮೀರ ಕಾಂಗ್ರೆಸ್ನ ಕೊಡುಗೆಯಾಗಿದೆ. ಹಿಮಾಲಯದಲ್ಲಿ ಹುಲ್ಲುಕಡ್ಡಿಯೂ ಬೆಳೆಯುವುದಿಲ್ಲ ಎಂಬ ಕಾರಣಕ್ಕೆ ಭಾರತದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವುದಾಗಿ ನೆಹರೂ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು. ದೇಶದ ಬಹುಭಾಗಗಳನ್ನು ಬೇರೆ ದೇಶಗಳಿಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಪಾದಯಾತ್ರೆಯನ್ನು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಚೀನಾದ ಗಡಿಗಳಲ್ಲಿ ಮಾಡಲಿ ಎಂದು ವ್ಯಂಗ್ಯವಾಡಿದರು.
ಪಾಕಿಸ್ತಾನ ಜಿಂದಾಬಾದ್ ಎಂದವರ ಜತೆಯಲ್ಲಿ ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ದೇಶವನ್ನು ಜೋಡಿಸುತ್ತಿಲ್ಲ, ಬೇರ್ಪಡಿಸುತ್ತಿದೆ ಎಂದು ಟೀಕಿಸಿದರು.
ಕಪ್ಪುಪಟ್ಟಿಗೆ ಸೇರಿಸಿ: ಗಂಗೊಳ್ಳಿಯಲ್ಲಿ ಬಂದರಿನ ಜೆಟ್ಟಿ ಕುಸಿತಕ್ಕೆ ಕಳಪೆ ಕಾಮಗಾರಿ ಕಾರಣವಾಗಿದ್ದರೆ ಗುತ್ತಿಗೆದಾರ ಕಂಪೆನಿ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ಕಪ್ಪುಪಟ್ಟಿಗೆ ಸೇರಿಸಬೇಕು. ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಶೋಭಾ ಒತ್ತಾಯಿಸಿದರು.
ಹೆಸರು ಬದಲಾವಣೆ ಸುಳ್ಳು ಸುದ್ದಿ:ರಾಜಕಾರಣಿಗಳನ್ನು ಜೋಕರ್ಸ್ಗಳೆಂದು ತಿಳಿದಿರುವ ಕೆಲವರು ‘ಶೋಭಾ ಕರಂದ್ಲಾಜೆ’ ಹೆಸರು ಬದಲಾವಣೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.