ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ಚಿತ್ರೀಕರಣದ ‘ಜಾಲಿವುಡ್ ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಪಾರ್ಕ್’ಗೆ ಬೀಗ ಹಾಕಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಸರ್ಕಾರದ ಕ್ರಮವನ್ನು ಪ್ರಶ್ನಿಸಿ ‘ವಿಇಎಲ್ಎಸ್ ಸ್ಟುಡಿಯೋಸ್ ಅಂಡ್ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್’ ಕಂಪನಿಯ ನಿರ್ದೇಶಕ ಪ್ರಕಾಶ್ ಪಳನಿ ಸಲ್ಲಿಸಿರುವ ರಿಟ್ ಅರ್ಜಿ, ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಗುರುವಾರದ ಮೊಕದ್ದಮೆಗಳ ಆಲಿಕೆಯ ಸೂಚನಾ ಪಟ್ಟಿಯಲ್ಲಿ ನಿಗದಿಯಾಗಿದೆ.
ಅರ್ಜಿಯಲ್ಲಿ ಏನಿದೆ?: ‘ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು 2025ರ ಅಕ್ಟೋಬರ್ 6ರಂದು ನೋಟಿಸ್ ಜಾರಿ ಮಾಡಿದೆ. ಸೂಕ್ತ ಕಾಲಾವಕಾಶ ನೀಡದೇ ಅಕ್ಟೋಬರ್ 7ರಂದು ಜಾಲಿವುಡ್ ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಪಾರ್ಕ್ಗೆ ಬೀಗ ಹಾಕಲಾಗಿದೆ. ರಾಮನಗರ ತಹಶೀಲ್ದಾರ್ ಅವರ ಈ ನಡೆ ಕಾನೂನುಬಾಹಿರ ಮತ್ತು ಸ್ವೇಚ್ಛೆಯ ಕ್ರಮವಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
‘ಇದು ನಿರ್ದಿಷ್ಟ ಗುರಿ ಇಟ್ಟುಕೊಂಡಿರುವ ಮಾಡಿರುವ ಆದೇಶವಾಗಿದೆ. ಹಾಗಾಗಿ, ಸಹಜ ನ್ಯಾಯ ತತ್ವಕ್ಕೆ ವಿರುದ್ಧವಾದ ಈ ಆಕ್ಷೇಪಾರ್ಹ ಆದೇಶವನ್ನು ವಜಾಗೊಳಿಸಬೇಕು’ ಎಂದು ಕೋರಲಾಗಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಜಿ.ಎಂ.ವಿಶ್ವಾಸ್ ಗೌಡ ವಕಾಲತ್ತು ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.