ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ್ದ ಸಾರಿಗೆ ಇಲಾಖೆ, ಇದೀಗ ಹೆಲ್ಮೆಟ್ ಧರಿಸದವರ ಚಾಲನಾ ಪರವಾನಗಿಯನ್ನು ಮೂರು ತಿಂಗಳು ಅಮಾನತು ಮಾಡಲು ತೀರ್ಮಾನಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಇದೇ 5ರಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲ ಆರ್ಟಿಒಗಳಿಗೆ ಇದೇ 16ರಂದು ಸುತ್ತೋಲೆ ಕಳುಹಿಸಿರುವ ಸಾರಿಗೆ ಇಲಾಖೆ ಆಯುಕ್ತ, ‘ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಲಾಯಿಸುವವರಿಗೆ ಮೋಟಾರು ವಾಹನ ಕಾಯ್ದೆಯಡಿ ಈಗಾಗಲೇ ದಂಡ ವಿಧಿಸಲಾಗುತ್ತಿದೆ. ಇನ್ನುಮುಂದೆ ದಂಡ ಜೊತೆಯಲ್ಲಿ ಚಾಲಕರ ಚಾಲನಾ ಪರವಾನಗಿಯನ್ನೂ ಮೂರು ತಿಂಗಳು ಅಮಾನತು ಮಾಡಬೇಕು. ಈ ಆದೇಶವನ್ನು ತಕ್ಷಣದಿಂದ ಜಾರಿಗೆ ತರಬೇಕು’ ಎಂದು ಸೂಚಿಸಿದ್ದಾರೆ.
‘ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಧರಿಸದ ಸವಾರರೇ ಹೆಚ್ಚು ಮೃತಪಡುತ್ತಿದ್ದಾರೆ. ದಂಡ ವಿಧಿಸಿದರೂ ಹಲವರು ತಪ್ಪು ತಿದ್ದಿಕೊಳ್ಳುತ್ತಿಲ್ಲ. ಹೀಗಾಗಿ, ಚಾಲನಾ ಪರವಾನಗಿಯನ್ನು ಮೂರು ತಿಂಗಳು ಅಮಾನತು ಮಾಡುವಂತೆ ಸುಪ್ರೀಂಕೋರ್ಟ್ ನಿರ್ದೇಶನದ ರಚಿಸಲಾಗಿರುವ ರಸ್ತೆ ಸುರಕ್ಷತಾ ಸಮಿತಿಯು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದರನ್ವಯವೇ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ’ ಎಂದೂ ಸುತ್ತೋಲೆ ಹೇಳಿದೆ.
‘ಹೆಲ್ಮೆಟ್ ಧರಿಸದವರ ಚಾಲನಾ ಪರವಾನಗಿ ಅಮಾನತು ಮಾಡಿ, ಆ ಬಗ್ಗೆ ವರದಿ ಸಿದ್ಧಪಡಿಸಿ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಕಚೇರಿಗೆ ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು’ ಎಂದೂ ಆಯುಕ್ತರು ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.