ಬೆಂಗಳೂರು: ‘ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕಿರಣ್ ಅವರನ್ನು ಅಕ್ರಮವಾಗಿ ಬಂಧಿಸಲಾಗಿದೆ’ ಎಂದು ಆರೋಪಿಸಲಾಗಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ಕಿರಣ್ ಪತ್ನಿ ಆಂಥೋನಿ ಶಿರ್ಲಿನ್ಯಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಕಿರಣ್ ಅವರನ್ನು ಅಕ್ರಮವಾಗಿ ಬಂಧಿಸಲಾಗಿದೆ. ಇದೇ 16ರ ಬೆಳಿಗ್ಗೆ ಪೊಲೀಸರು ಮನೆಗೆ ಬಂದು ಕಿರಣ್ ಬಗ್ಗೆ ವಿಚಾರಿಸಿದರು ಮತ್ತು ತಕ್ಷಣವೇ ಅವರನ್ನು ಕರೆದೊಯ್ದರು. ತದನಂತರ ಅವರು ಎಲ್ಲಿದ್ದಾರೆ, ಏನಾಗಿದ್ದಾರೆ ಎಂಬ ಬಗ್ಗೆ ಮಾಹಿತಿಯಿಲ್ಲ’ ಎಂದು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ, ‘ಅರ್ಜಿದಾರರ ಪತಿಯನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರವೇ ಬಂಧಿಸಿ ಕೋರ್ಟ್ಗೆ ಹಾಜರುಪಡಿಸಲಾಗಿದೆ. ಇದರಲ್ಲಿ ಅಕ್ರಮ ಬಂಧನದ ಪ್ರಶ್ನೆಯೇ ಉದ್ಬವಿಸುವುದಿಲ್ಲ’ ಎಂದು ಪ್ರತಿಪಾದಿಸಿದರು. ಇದನ್ನು ಮನ್ನಿಸಿದ ನ್ಯಾಯಪೀಠ ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.