ADVERTISEMENT

ಬಿಕ್ಲು ಶಿವು ಕೊಲೆ ಪ್ರಕರಣ | ಬೈರತಿ ಬಸವರಾಜಗೆ ಜಾಮೀನು: ನ್ಯಾಯಪೀಠ ಅತೃಪ್ತಿ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 16:19 IST
Last Updated 6 ಜನವರಿ 2026, 16:19 IST
ಬೈರತಿ ಬಸವರಾಜ
ಬೈರತಿ ಬಸವರಾಜ   

ಬೆಂಗಳೂರು: ‘ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದ ಐದನೇ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ರಜಾಕಾಲದ ಏಕಸದಸ್ಯ ಪೀಠವು ಪ್ರಾಸಿಕ್ಯೂಷನ್‌ ವಾದ ಆಲಿಸದೆಯೇ ಅಷ್ಟೊಂದು ತರಾತುರಿಯಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಅಗತ್ಯವೇನಿತ್ತು’ ಎಂದು ನಿಯಮಿತ ನ್ಯಾಯಪೀಠ ಖಾರವಾಗಿ ಪ್ರಶ್ನಿಸಿದೆ.

‘ರಜಾಕಾಲದ ಏಕಸದಸ್ಯ ನ್ಯಾಯಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಹೊರಡಿಸಿರುವ ಮಧ್ಯಂತರ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯನ್ನು ನ್ಯಾಯಮೂರ್ತಿ ಎಸ್‌.ಸುನಿಲ್ ದತ್‌ ಯಾದವ್ ಅವರಿದ್ದ ನಿಯಮಿತ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್‌ ಪರ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್‌ ಬಿ.ಎನ್‌.ಜಗದೀಶ್‌, ‘ಬಸವರಾಜ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಾಗಿದ್ದು, ಅವರಿಗೆ ಈಗಾಗಲೇ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನನ್ನು ವಿಸ್ತರಣೆ ಮಾಡಬಾರದು, ರದ್ದುಪಡಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. 

ADVERTISEMENT

‘ರಜಾಕಾಲದ ಪೀಠದ ಆದೇಶದಲ್ಲಿ ನಿರೀಕ್ಷಣಾ ಜಾಮೀನು ಕುರಿತ ಅರ್ಜಿಯ ಪ್ರತಿಯನ್ನು ಪ್ರಾಸಿಕ್ಯೂಟರ್‌ಗೆ ಒದಗಿಸಲಾಗಿದೆ ಎಂದು ವಿವರಿಸಲಾಗಿದೆ. ಒಂದು ವೇಳೆ ನಮಗೆ ಅರ್ಜಿಯ ಪ್ರತಿ ಲಭ್ಯವಾಗಿರುವುದು ಸಾಬೀತಾದರೆ ಎಲ್ಲ ಆರೋಪಗಳನ್ನು ಹಿಂಪಡೆಯಲಾಗುವುದು. ತಪ್ಪು ಮಾಹಿತಿ ನೀಡಿ ನಿರೀಕ್ಷಣಾ ಜಾಮೀನು ಪಡೆಯಲಾಗಿದೆ’ ಎಂದು ಪ್ರತಿಪಾದಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅರ್ಜಿದಾರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ವರದಿ ಸಲ್ಲಿಸಿಲ್ಲ ಎಂದು ರಜಾಕಾಲದ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ರಾಜ್ಯ ಪ್ರಾಸಿಕ್ಯೂಟರ್ ಹಾಜರಿಲ್ಲದ ವೇಳೆ ಈ ರೀತಿ ತಿಳಿಸಲು ಸಾಧ್ಯವೇ’ ಎಂದು ಪ್ರಶ್ನಿಸಿತು.

‘ಜಾಮೀನು ನೀಡುವ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರ ವಾದ ಕೇಳುವುದು ಬೇಡವೇ?, ಪ್ರಾಸಿಕ್ಯೂಷನ್ ಪರ ವಕೀಲರ ವಾದ ಆಲಿಸುವುದಕ್ಕಾಗಿಯೇ ವಿಚಾರಣೆಯನ್ನು ಕನಿಷ್ಠ ಮತ್ತೊಂದು ದಿನಕ್ಕಾದರೂ ನಿಗದಿ ಮಾಡಬಹುದಾಗಿತ್ತಲ್ಲವೇ’ ಎಂದು ಕಿಡಿ ಕಾರಿತು.

ಅರ್ಜಿದಾರ ಬಸವರಾಜ ಪರ ಪದಾಂಕಿತ ಹಿರಿಯ ವಕೀಲ ಸಂದೇಶ್‌ ಜೆ.ಚೌಟ ವಾದ ಮಂಡಿಸಿದರು. ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.