ADVERTISEMENT

ಹಾವೇರಿ, ಬೀದರ್‌ ಸೇರಿದಂತೆ ಏಳು ಹೊಸ ವಿವಿ ಸ್ಥಾಪನೆ ಮಸೂದೆಗೆ ವಿಧಾನಸಭೆ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 13:04 IST
Last Updated 21 ಸೆಪ್ಟೆಂಬರ್ 2022, 13:04 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ಬೀದರ್‌, ಹಾವೇರಿ, ಕೊಡಗು, ಚಾಮರಾಜನಗರ, ಹಾಸನ, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳ ಸ್ಥಾಪನೆಗಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ 2022 ಕ್ಕೆ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರ ದೊರೆಯಿತು.

ಉನ್ನತ ಶಿಕ್ಷಣ ಸಚಿವ ಡಾ। ಅಶ್ವತ್ಥ ನಾರಾಯಣ ಮಸೂದೆಯನ್ನು ಮಂಡಿಸಿ, ಏಳು ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಬೇಕು ಎಂಬ ಬೇಡಿಕೆ ಇತ್ತು. ಬಜೆಟ್‌ನಲ್ಲೂ ಘೋಷಿಸಲಾಗಿತ್ತು. ಇದರಿಂದ ವಿದ್ಯಾರ್ಥಿಗಳ ಸಬಲೀಕರಣವಾಗಲಿದ್ದು, ಮುಂಬರುವ ದಿನಗಳಲ್ಲಿ ಬೇರೆ ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು. ಎಂದು ಹೇಳಿದರು.

ಪ್ರತಿಯೊಂದು ವಿಶ್ವವಿದ್ಯಾಲಯಕ್ಕೆ ತಲಾ ₹2 ಕೋಟಿಯಂತೆ ವಾರ್ಷಿಕ ಆವರ್ತಕ ವೆಚ್ಚ ವರ್ಷವೊಂದಕ್ಕೆ ₹14 ಕೋಟಿ ವೆಚ್ಚವಾಗುತ್ತದೆ ಎಂದು ಅವರು ಹೇಳಿದರು. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯವನ್ನು (ಸ್ವಾಯತ್ತ) ಏಕೀಕೃತ ವಿಶ್ವವಿದ್ಯಾಲಯವೆಂದು 2019 ರಲ್ಲಿ ಮಾಡಲಾಗಿತ್ತು. ಈಗ ಮಸೂದೆಯ ಮೂಲಕ ಸ್ವತಂತ್ರ ವಿಶ್ವವಿದ್ಯಾಲಯವಾಗಿ ಮಾರ್ಪಾಡು ಮಾಡಲಾಗಿದೆ.

ADVERTISEMENT

ವಿ.ವಿ.ಕಾಯಕಲ್ಪಕ್ಕೆ ಹೊಸ ಕಾನೂನು

ರಾಜ್ಯದ ವಿಶ್ವವಿದ್ಯಾಲಯಗಳಿಗೆ ಕಾಯಕಲ್ಪ ನೀಡಲು ಹೊಸ ಕಾನೂನು ತರಲಾಗುವುದು. ವಿಶ್ವವಿದ್ಯಾಲಯ ಕಾಯ್ದೆ ಮಾಡಿ 22 ವರ್ಷಗಳು ಕಳೆದಿವೆ. ಅದನ್ನು ಬದಲಿಸಲು ಮಸೂದೆಯನ್ನು ಮಂಡಿಸಲಾಗುವುದು. ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳು ಮತ್ತು ಸವಾಲುಗಳಿಗೆ ಅದರಲ್ಲಿ ಪರಿಹಾರವಿದೆ. ಇದು ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಿಗೂ ಅನ್ವಯಿಸುತ್ತದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.