ADVERTISEMENT

ರಾಜ್ಯಸಭೆ ಚುನಾವಣೆ: ಈರಣ್ಣ ಕಡಾಡಿ, ಅಶೋಕ ಗಸ್ತಿ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 10:33 IST
Last Updated 9 ಜೂನ್ 2020, 10:33 IST
ಅಶೋಕ ಗಸ್ತಿ ಮತ್ತು ಈರಣ್ಣ ಕಡಾಡಿ
ಅಶೋಕ ಗಸ್ತಿ ಮತ್ತು ಈರಣ್ಣ ಕಡಾಡಿ   
""

ಬೆಂಗಳೂರು: ಇದೇ 19 ರಂದು ನಡೆಯಲಿರುವ ರಾಜ್ಯಸಭಾ ದ್ವೈ-ವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅಶೋಕ ಗಸ್ತಿ ಮತ್ತು ಈರಣ್ಣ ಕಡಾಡಿ ಅವರು ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹಾಜರಿದ್ದರು.

ಹಿರಿಯ ಶಾಸಕ ಉಮೇಶ ಕತ್ತಿ ಮತ್ತು ರಾಜ್ಯಸಭೆ ಟಿಕೆಟ್‌ ಆಕಾಂಕ್ಷಿ ರಮೇಶ ಕತ್ತಿ ಅವರು ಕೂಡ ನಾಮಪತ್ರ ಸಲ್ಲಿಕೆ ವೇಳೆ ಬಂದಿದ್ದರು.

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಅಶೋಕ ಗಸ್ತಿ

ಬಿಜೆಪಿ ಅಭ್ಯರ್ಥಿ ಈರಣ್ಣಾ ಕಡಾಡಿ ಪರಿಚಯ

ಬೆಳಗಾವಿ ಜಿಲ್ಲೆ ಗೋಕಾಕ ತಾಲ್ಲೂಕಿನ ಕಲ್ಲೋಳಿಯವರಾದ ಈರಣ್ಣಾ ಅವರು 22ನೇ ವಯಸ್ಸಿನಲ್ಲಿಯೇ ಸಾರ್ವಜನಿಕ ಜೀವನ ಪ್ರವೇಶಿಸಿದರು. ಸಂಘ ಪರಿವಾರ ಹಾಗೂ ಬಿಜೆಪಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟಿಸಲು ತೊಡಗಿಕೊಂಡರು.

ಅರಭಾವಿ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ, ಮಂಡಳ ಅಧ್ಯಕ್ಷ, ಜಿಲ್ಲಾ ಕಾರ್ಯದರ್ಶಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ರಾಜ್ಯ ಸಮಿತಿ ಕಾರ್ಯದರ್ಶಿ ಹಾಗೂ ಪ್ರಸ್ತುತ ಪಕ್ಷದ ಬೆಳಗಾವಿ ವಿಭಾಗದ ಉಸ್ತುವಾರಿಯಾಗಿದ್ದಾರೆ. 2008ರಲ್ಲಿ ಎನ್‌ಜಿಇಎಫ್‌ ಅಧ್ಯಕ್ಷರಾಗಿದ್ದರು. 2010ರಲ್ಲಿ ಬೆಳಗಾವಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದರು.

ಬಿಜೆಪಿ ಅಭ್ಯರ್ಥಿ ಅಶೋಕ ಗಸ್ತಿ ಪರಿಚಯ

ಅಶೋಕ ಗಸ್ತಿ ರಾಯಚೂರಿನವರು. ವಕೀಲರಾದ ಇವರು 1989ರಲ್ಲಿ ಬಿಜೆಪಿ ಸೇರ್ಪಡೆಯಾಗಿ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷರಾದರು. 2009ರಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ, ನಂತರ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದರು. ಜಗದೀಶ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು.

56 ವರ್ಷದ ಅಶೋಕ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರು. ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ಪಕ್ಷದ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.