ADVERTISEMENT

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸಿಡಿ ಪ್ರಕರಣಗಳು ಯಾವ ರೀತಿ ತನಿಖೆಯಾಗಿವೆ?: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 13:30 IST
Last Updated 30 ಮಾರ್ಚ್ 2021, 13:30 IST
ನಳಿನ್ ಕುಮಾರ್ ಕಟೀಲ್ (ಪ್ರಜಾವಾಣಿ ಸಂಗ್ರಹ ಚಿತ್ರ)
ನಳಿನ್ ಕುಮಾರ್ ಕಟೀಲ್ (ಪ್ರಜಾವಾಣಿ ಸಂಗ್ರಹ ಚಿತ್ರ)   

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಿ.ಡಿ. ಪ್ರಕರಣದ ತನಿಖೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದಿರುವ ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸಿಡಿ ಪ್ರಕರಣಗಳು ಯಾವ ರೀತಿ ತನಿಖೆ ಆಗಿವೆ ಎಂಬುದು ರಾಜ್ಯದ ಜನತೆಗೆ ತಿಳಿದಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಉಲ್ಲೇಖಿಸಿ ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಸಿದ್ದರಾಮಯ್ಯ ಅವರಿಗೆ ಸಿಬಿಐ, ಐಟಿ, ಎಸ್‌ಐಟಿ ಮೇಲೆ ನಂಬಿಕೆ ಇಲ್ಲ. ಮೇಲಾಗಿ, ಅವರಿಗೆ ಸ್ವತಃ ಅವರ ಮೇಲೆಯೇ ನಂಬಿಕೆ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.

ADVERTISEMENT

ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳಿಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ, ತನಿಖೆ ಕಾನೂನುಬದ್ಧವಾಗಿ ನಡೆಯಬೇಕು ‌ಎಂದು ಅಗ್ರಹಿಸಿದ್ದೆ. ಹೈಕೋರ್ಟ್ ಮುಖ್ಯ‌ ನ್ಯಾಯಮೂರ್ತಿ ಅವರ ಉಸ್ತುವಾರಿಯಲ್ಲೇ‌ ನಡೆಯಬೇಕು ಎಂದು ಒತ್ತಾಯಿಸಿದ್ದೆ. ಸಂತ್ರಸ್ತ ಯುವತಿಯೇ ನ್ಯಾಯಮೂರ್ತಿಗಳಿಗೆ ಪತ್ರ ‌ಬರೆದಿದ್ದಾಳೆ ಎಂದಿದ್ದರು.

ಅಲ್ಲದೆ, ಸೋಮವಾರ ಪ್ರತಿಕ್ರಿಯಿಸಿದ್ದ ಅವರು, ‘ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮೌನ ವಹಿಸಿರುವುದನ್ನು ನೋಡಿದರೆ, ಅವರಲ್ಲೇ ಹುಳುಕಿದೆ ಎನಿಸುತ್ತದೆ’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.