ಬೆಂಗಳೂರು: ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ರಾಜ್ಯ ಪ್ರಮುಖರ ಸಭೆ ನಗರದಲ್ಲಿ ಗುರುವಾರ ನಡೆಯಲಿದೆ.
ಚಿಂಚೋಳಿಯ ಡಾ.ಉಮೇಶ ಜಾಧವ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಹಾಗೂ ಕುಂದಗೋಳ ಶಾಸಕರೂ ಆಗಿದ್ದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಹೃದಯಾಘಾತದಿಂದ ನಿಧನರಾಗಿದ್ದರಿಂದ ಎರಡೂ ಕ್ಷೇತ್ರಗಳಿಗೆ ಮೇ 19ರಂದು ಉಪಚುನಾವಣೆ ನಡೆಯಲಿದೆ. ಏಪ್ರಿಲ್ 29ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ.
‘ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಸಂಬಂಧಿಸಿದ ಜಿಲ್ಲೆಗಳ ಮುಖಂಡರ ಜತೆಗೆ ಚರ್ಚಿಸಲಾಗುವುದು. ಅಭ್ಯರ್ಥಿಗಳ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಗುವುದು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸುದ್ದಿಗೊಷ್ಠಿಯಲ್ಲಿ ತಿಳಿಸಿದರು.
ಚುನಾವಣಾ ಆಯೋಗಕ್ಕೆ ದೂರು: ‘ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮತದಾರರ ಪಟ್ಟಿಯಿಂದ ಅನೇಕ ಮಂದಿಯ ಹೆಸರುಗಳನ್ನು ಕೊನೆಯ ಗಳಿಗೆಯಲ್ಲಿ ತೆಗೆದು ಹಾಕಲಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತೇವೆ’ ಎಂದರು.
‘ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಗೃಹ ಸಚಿವ ಎಂ.ಬಿ.ಪಾಟೀಲ ಬರೆದಿರುವ ಪತ್ರದ ಬಗ್ಗೆ ಪ್ರಸ್ತಾಪಿಸಿದ್ದ ಮಹೇಶ ಹೆಗಡೆ ಎಂಬುವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಈ ರೀತಿಯ ಕಿರುಕುಳ, ಬಂಧನ ಮುಂದುವರಿದರೆ ಬಿಜೆಪಿ ರಸ್ತೆಗಿಳಿದು ಪ್ರತಿಭಟನೆ ನಡೆಸಲಿದೆ’ ಎಂದು ಲಿಂಬಾವಳಿ ಎಚ್ಚರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.