ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಎಲ್ಲ ಕ್ಷೇತ್ರಗಳಲ್ಲಿಯೂ ಗೆಲ್ಲುತ್ತದೆ. ಮುಂದಿನ ಮೂರೂವರೆ ವರ್ಷ ನಮ್ಮ ಪಕ್ಷವೇ ಅಧಿಕಾರ ನಡೆಸುತ್ತದೆ. ಮುಂಬರುವ ಬಜೆಟ್ನಲ್ಲಿ ರೈತರ ಸಂಕಷ್ಟವನ್ನು ದೂರ ಮಾಡಲು ಹೊಸ ಯೋಜನೆಗಳನ್ನು ಘೋಷಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮಂಗಳವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಉಪ ಚುನಾವಣೆ ಫಲಿತಾಂಶದ ಬಳಿಕ ಯಾರು ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂಬುದು ನಾಡಿನ ಜನರಿಗೆ ಗೊತ್ತಾಗುತ್ತದೆ. ಎಲ್ಲ ಕ್ಷೇತ್ರಗಳಲ್ಲಿ ಎರಡು ಸುತ್ತು ಪ್ರಚಾರ ಮಾಡಿದ್ದೇನೆ. ಎಲ್ಲ ಕಡೆ ಬಿಜೆಪಿ ಪರವಾದ ಅಲೆಯಿದೆ’ ಎಂದರು.
‘ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ನಾವು ಒಗ್ಗಟ್ಟಾಗಿ ಇದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ಅವರ ಹೇಳಿಕೆ ಮಾತಿಗಷ್ಟೇ ಸೀಮಿತವಾಗಿದೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಅವರ ಯಾವ ಮಾತಿಗೂ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ’ ಎಂದರು.
ರಾಜ್ಯಸಭೆಗೆ ಬಿಜೆಪಿಯಿಂದ ರಾಮಮೂರ್ತಿ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದೇವೆ. ಆದರೆ, ಉಪಚುನಾವಣೆ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯುವುದಾಗಿ ಹೇಳುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ಗೆ ಒಬ್ಬ ಅಭ್ಯರ್ಥಿಯನ್ನೂ ಕಣಕ್ಕಿಳಿಸಲು ಸಾಧ್ಯವಾಗಿಲ್ಲ. ಈ ಎರಡೂ ಪಕ್ಷಗಳು ಈಗಾಗಲೇ ತಮ್ಮ ಸೋಲು ಒಪ್ಪಿಕೊಂಡಿವೆ’ ಎಂದರು.
ಉಪಚುನಾವಣೆ ಬಳಿಕ ಬಹುಮತ ಸಿಗುತ್ತದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಹೇಳುತ್ತಿವೆ. ಹಾಗಾದರೆ ರಾಜ್ಯಸಭೆಗೆ ಏಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ ಎಂದು ಪ್ರಶ್ನಿಸಿದರು.
ಫಲಿತಾಂಶದ ಬಳಿಕ ಕಾಂಗ್ರೆಸ್ನ ನಾಯಕರೆಲ್ಲರೂ ಸೇರಿ ವಿರೋಧ ಪಕ್ಷದ ಸ್ಥಾನಕ್ಕೆ ಯಾವಾಗ ರಾಜೀನಾಮೆ ಕೊಡುತ್ತೀರಿ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸುತ್ತಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.