
ಪ್ರಜಾವಾಣಿ ವಾರ್ತೆ
ಬೆಂಗಳೂರು: ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ, ವಿಧಾನಪರಿಷತ್ ಚುನಾವಣೆ ಮತ್ತಿತರ ವಿಷಯಗಳು ಕುರಿತು ಚರ್ಚೆ ನಡೆಸುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಭೆ ಶನಿವಾರ ನಡೆಯಲಿದೆ.
ಚುನಾವಣೆಗಳಲ್ಲಿ ಹೊಂದಾಣಿಕೆ, ವಿಬಿ –ಜಿ ರಾಮ್ ಜಿ ಯೋಜನೆ ಕುರಿತು ಕಾಂಗ್ರೆಸ್ ಹೋರಾಟ, ಬಳ್ಳಾರಿ ಗಲಾಟೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಒಗ್ಗಟ್ಟಿನ ಹೋರಾಟ ನಡೆಸುವ ಕುರಿತು ಒಮ್ಮತದ ತೀರ್ಮಾನಕ್ಕೆ ಕೈಗೊಳ್ಳಲಾಗುವುದು. ಗೋಲ್ಡ್ ಫಿಂಚ್ ಹೊಟೇಲ್ನಲ್ಲಿ ಈ ಸಭೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷಗಳ ನಾಯಕರಾದ ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಜೆಡಿಎಸ್ ಪ್ರಮುಖರ ಸಮಿತಿ ಸದಸ್ಯ ಎಂ. ಕೃಷ್ಣಾರೆಡ್ಡಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.