ತುಮಕೂರು: ’ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಬಿಜೆಪಿಗೆ ಮತಹಾಕುವ 680 ಹಿಂದೂ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ’ ಎಂದು ಬಿಜೆಪಿ ಮುಖಂಡ ಬಿ.ಸುರೇಶ್ಗೌಡ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಮತದಾರರ ಹಕ್ಕು ಕಸಿದುಕೊಳ್ಳುವ ಕೆಲಸವಾಗಿದೆ. ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದ ಈ ಗ್ರಾಮದಲ್ಲಿಯೇ ವಾಸವಿರುವವರನ್ನು ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ’ ಎಂದು ಹೇಳಿದರು.
‘ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿರುವವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು. ಅಭ್ಯರ್ಥಿ ಮಗನೇ ಮುಖ್ಯಮಂತ್ರಿಯಾಗಿರುವುದರಿಂದ ಆಡಳಿತ ದುರುಪಯೋಗ ನಡೆಯಲಿದೆ. ನ್ಯಾಯ ಸಮ್ಮತ ಚುನಾವಣೆ ನಡೆಯುವ ಬಗ್ಗೆ ನಮಗೆ ಅನುಮಾನ ಇದೆ’ ಎಂದು ತಿಳಿಸಿದರು.
‘ಈ ಅನುಮಾನಕ್ಕೆ ಪುಷ್ಟಿ ಎಂಬಂತೆ ತುಮಕೂರು ತಹಶೀಲ್ದಾರ್, ಬೂತ್ ಮಟ್ಟದ ಅಧಿಕಾರಿಗಳು ಜೆಡಿಎಸ್ ಪಕ್ಷದ ಏಜೆಂಟರಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ಪರಿಶೀಲನೆಗೆ ಆದೇಶ: ಮತದಾರರ ಪಟ್ಟಿಯಲ್ಲಿ ಹೆಸರು ಕೈ ಬಿಟ್ಟಿರುವ ಬಗ್ಗೆ ಮಾಜಿ ಶಾಸಕರು ದೂರು ಕೊಟ್ಟಿದ್ದಾರೆ. ಈ ಕುರಿತು ಪರಿಶೀಲನೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಕೇಶ್ಕುಮಾರ್ ತಿಳಿಸಿದರು.
‘ಜನವರಿ ತಿಂಗಳಲ್ಲೇ ಎಲ್ಲ ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿ ಕೊಡಲಾಗಿತ್ತು. ಪರಿಶೀಲನೆ ನಡೆಸಿ ಗಮನಕ್ಕೆ ತರಲು ನಾಮಪತ್ರ ಹಿಂದಕ್ಕೆ ಪಡೆಯುವ ದಿನದವರೆಗೂ ಅವಕಾಶವಿತ್ತು. ಗಮನಕ್ಕೆ ತಂದಿದ್ದರೆ ಸರಿಪಡಿಸಬಹುದಿತ್ತು. ಈಗ ಅದಕ್ಕೆ ಅವಕಾಶವಿಲ್ಲ. ಆದರೆ, ಬೂತ್ ಮಟ್ಟದ ಅಧಿಕಾರಿಗಳು ಮತದಾರರ ವಾಸ ಸ್ಥಳ ಪರಿಶೀಲನೆ ಪ್ರಕ್ರಿಯೆ ಸರಿಯಾಗಿ ನಡೆಸಿದ್ದಾರೊ ಇಲ್ಲವೊ ಎಂಬುದನ್ನು ಪರಿಶೀಲನೆ ಮಾಡಬೇಕಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.