ADVERTISEMENT

ಮೊಸರು, ಮಂಡಕ್ಕಿ ಮೇಲೆ ಜಿಎಸ್‌ಟಿ ಹೇರಿಕೆ ಏಕಪಕ್ಷೀಯ ತೀರ್ಮಾನವಲ್ಲ: ಸಿ.ಟಿ. ರವಿ

​ಪ್ರಜಾವಾಣಿ ವಾರ್ತೆ
Published 18 ಜುಲೈ 2022, 6:49 IST
Last Updated 18 ಜುಲೈ 2022, 6:49 IST
ಸಿ.ಟಿ. ರವಿ
ಸಿ.ಟಿ. ರವಿ   

ಬೆಂಗಳೂರು:ಮೊಸರು, ಮಂಡಕ್ಕಿ ಸೇರಿದಂತೆ ಕೆಲವು ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಿರುವುದು ಕೇಂದ್ರ ಸರ್ಕಾರದ ಏಕಪಕ್ಷೀಯ ತೀರ್ಮಾನ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, 'ಜಿಎಸ್‌ಟಿ ಮಂಡಳಿಯಲ್ಲಿ ಎಲ್ಲ ರಾಜ್ಯಗಳ ಪ್ರತಿನಿಧಿಗಳೂ ಇದ್ದಾರೆ. ಮಂಡಳಿಯ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ' ಎಂದರು.

ಈಗ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಲ್ಲಿಲ್ಲ‌. ತಪ್ಪುಗಳಾಗಿದ್ದರೆ ಸರಿಪಡಿಸಲು ಅವಕಾಶ ಇದೆ ಎಂದು ಹೇಳಿದರು.

ADVERTISEMENT

ರಾಷ್ಟ್ರಪತಿ ಚುನಾವಣೆಯಲ್ಲಿ ಕೆಲವು ಪಕ್ಷಗಳ ಮುಖವಾಡ ಕಳಚಿ ಬಿದ್ದಿದೆ. ಎನ್‌ಡಿಎ ಮೈತ್ರಿಕೂಟ ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಿದರೂ ವಿರೋಧಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಅಹಿಂದ ಸಿದ್ಧಾಂತ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.