ಬೆಂಗಳೂರು: ‘ವಿಜಯಪುರದಲ್ಲಿ ಶಿಕ್ಷಣ ಸಂಸ್ಥೆಗಳು, ಕಲಬುರಗಿಯಲ್ಲಿ ಸಕ್ಕರೆ ಕಾರ್ಖಾನೆ ಹೊಂದಿದ್ದೀರಿ. ಇದಕ್ಕೆ ನಿಮಗೆ ಎಲ್ಲಿಂದ ಹಣ ಬಂತು? ನಿಮ್ಮ ಬಂಡವಾಳ ಎಲ್ಲ ಗೊತ್ತಿದೆ. ಹಿಂದೂ ಹುಲಿ ಎಂದು ಹೇಳಿಕೊಳ್ಳುವ ನೀವು ಜೆಡಿಎಸ್ ಸೇರಿಕೊಂಡು ಟಿಪ್ಪುಸುಲ್ತಾನನ ಜನ್ಮ ದಿನಾಚರಣೆಯಂದು ಬಿರಿಯಾನಿ, ಕಬಾಬ್ ತಿಂದಿದ್ದನ್ನು ಮರೆತು ಬಿಟ್ಟಿರಾ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಛೇಡಿಸಿದರು.
ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮನೆಯಲ್ಲಿ ಬುಧವಾರ ಬಿ.ವೈ.ವಿಜಯೇಂದ್ರ ನಿಷ್ಠರ ಬಣದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಯತ್ನಾಳ ವಿರುದ್ಧ ಹರಿಹಾಯ್ದರು.
‘ಸಚಿವ ಎಂ.ಬಿ.ಪಾಟೀಲ ಜತೆ ಯತ್ನಾಳ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಯತ್ನಾಳ ಮೂಲತಃ ಬಬಲೇಶ್ವರದವರು. ಆ ಕ್ಷೇತ್ರದಲ್ಲಿ ಏಕೆ ಸ್ಪರ್ಧೆ ಮಾಡುವುದಿಲ್ಲ? ಏಕೆಂದರೆ ಕಾಂಗ್ರೆಸ್ ಜತೆಗಿನ ಒಳ ಒಪ್ಪಂದವೇ ಕಾರಣ. ಅಪ್ಪು ಪಟ್ಟಣಶೆಟ್ಟಿಗೆ ಟಿಕೆಟ್ ಕೊಟ್ಟಿದ್ದರೆ ಯತ್ನಾಳ ಶಾಸಕ ಆಗುತ್ತಿರಲಿಲ್ಲ. ಹಿಂದೆ ಪಕ್ಷದಿಂದ ಉಚ್ಛಾಟನೆಗೊಂಡಿದ್ದಾಗ, ಯಡಿಯೂರಪ್ಪ ಅವರ ಕೈ–ಕಾಲು ಹಿಡಿದು ಪಕ್ಷಕ್ಕೆ ವಾಪಸ್ ಬಂದರು. ಅವರು ನಾಲಗೆ ಬಿಗಿ ಹಿಡಿದು ಮಾತನಾಡಬೇಕು’ ಎಂದರು.
ಯತ್ನಾಳ, ಕುಮಾರ್ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ, ಬಿ.ಪಿ.ಹರೀಶ್ ಅವರನ್ನು ಮುಲಾಜಿಲ್ಲದೇ ಪಕ್ಷದಿಂದ ಉಚ್ಛಾಟಿಸಬೇಕು. ಮೂರು– ನಾಲ್ಕು ಜನ ಸೇರಿಕೊಂಡು ದೆಹಲಿಗೆ ಹೋದರೆ, ಇಡೀ ಪಕ್ಷವೇ ಹೋಗಿದೆ ಎಂಬಂತೆ ಬಿಂಬಿಸುತ್ತಿದ್ದಾರೆ. ಇವರು ಕಾಮಿಡಿ ಪೀಸ್ಗಳು ಮತ್ತು ಮಾನಸಿಕ ಅಸ್ವಸ್ಥರು ಎಂದು ಟೀಕಿಸಿದರು.
ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ಇವರಿಗೆ ಅವಕಾಶವೇ ಸಿಕ್ಕಿಲ್ಲ. ಆದರೆ, ಭೇಟಿ ಮಾಡಿ ದೂರು ಕೊಟ್ಟಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ನಡ್ಡಾ ಅವರನ್ನು ಭೇಟಿ ಮಾಡಿದ್ದರೆ ಫೋಟೊ ಬಿಡುಗಡೆ ಮಾಡಲಿ ಎಂದು ಅವರು ಸವಾಲು ಹಾಕಿದರು.
‘ಮಿಸ್ಟರ್ ಕುಮಾರ್ ಬಂಗಾರಪ್ಪ ನಿಮ್ಮ ತಂದೆ ಬಿಜೆಪಿಗೆ ಬಂದಾಗ ನೀನು ಬಿಜೆಪಿಗೆ ಬರಲಿಲ್ಲ. ಬಿಜೆಪಿಯ ಸೊರಬ ಕಾರ್ಯಕ್ರಮಕ್ಕೂ ಬಂದಿರಲಿಲ್ಲ. ಮೂಲ ಬಿಜೆಪಿ ಕಾರ್ಯಕರ್ತರನ್ನು ಮರೆತ ಕಾರಣಕ್ಕೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಬೇಕಾಯಿತು. ಸೋತ ಮೇಲೂ ಕಾಂಗ್ರೆಸ್ ಸೇರುವ ಪ್ರಯತ್ನ ಮಾಡಿದೆ. ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವುದಕ್ಕೂ ಅಡ್ಡಗಾಲು ಹಾಕಿದೆ. ಈಗ ನ್ಯಾಷನಲ್ ಲೀಡರ್ ಆಗಲು ಹೊರಟಿದ್ದೀಯಾ’ ಎಂದು ರೇಣುಕಾಚಾರ್ಯ ಏಕವಚನದಲ್ಲಿ ಕಿಡಿಕಾರಿದರು.
‘ಬಿ.ಪಿ.ಹರೀಶ್ ಶಾಸಕನಾಗಲು ಯಡಿಯೂರಪ್ಪ ಅವರೇ ಕಾರಣ. ಹರಿಹರದಲ್ಲಿ ನಿನ್ನ ಯೋಗ್ಯತೆ ಏನು ಎಂಬುದು ಗೊತ್ತಿದೆ. ಕಾಂಗ್ರೆಸ್ ಜತೆ ಒಳ ಒಪ್ಪಂದ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದೆ’ ಎಂದರು.
ಸಭೆಯಲ್ಲಿ ಮಾಜಿ ಶಾಸಕ ಸಂಪಂಗಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಎಂ.ಡಿ.ಲಕ್ಷ್ಮಿನಾರಾಯಣ ಮತ್ತು ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.