ADVERTISEMENT

‘ಬಾಯಿಗೆ ಬಂದಂತೆ ಮಾತನಾಡಿದರೆ ಶಿಸ್ತು ಕ್ರಮ’

ಶಾಸಕರಿಗೆ ಪ್ರಮುಖ ನಾಯಕರ ಸಮಿತಿ ಸಭೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 22:12 IST
Last Updated 4 ಡಿಸೆಂಬರ್ 2020, 22:12 IST
ಅರವಿಂದ ಲಿಂಬಾವಳಿ
ಅರವಿಂದ ಲಿಂಬಾವಳಿ   

ಬೆಳಗಾವಿ:‘ಸಚಿವ ಸಂಪುಟ‌ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಶಾಸಕರು ಅಥವಾ ಮುಖಂಡರು ಬಾಯಿಗೆ ಬಂದಂತೆ ಬಹಿರಂಗವಾಗಿ ಮಾತನಾಡುವುದನ್ನು ಪಕ್ಷ‌ ಗಂಭೀರವಾಗಿ ಪರಿಗಣಿಸುತ್ತದೆ. ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದರು.

ಇಲ್ಲಿ ಶುಕ್ರವಾರ ರಾತ್ರಿ ಎರಡು ತಾಸಿಗೂ ಹೆಚ್ಚು ಸಮಯ ನಡೆದ ಬಿಜೆಪಿ ಪ್ರಮುಖ ನಾಯಕರ ಸಮಿತಿಯ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆ ಆಗಿಲ್ಲ. ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರಿಗೆ ಇರುವ ಪರಮಾಧಿಕಾರ. ಈ ವಿಷಯದಲ್ಲಿ ಅವರು ಕೇಂದ್ರದ ನಾಯಕರೊಂದಿಗೆ ‌ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಆದ್ದರಿಂದ ಶಾಸಕರು ಬಹಿರಂಗ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.

ADVERTISEMENT

‘ಯಾರು ಮಂತ್ರಿ ಆಗಬೇಕು ಎನ್ನುವ ಬಗ್ಗೆಯೂ ಚರ್ಚೆಯಾಗಿಲ್ಲ. ವಿಸ್ತರಣೆ ಹಾಗೂ ದಿನಾಂಕ ನಿಗದಿ ಮಾಡುವ ಅಧಿಕಾರವೂ ಮುಖ್ಯಮಂತ್ರಿಯವರಿಗಿದೆ’ ಎಂದರು.

ಇವತ್ತಿನ ಸಭೆ ಮುಖ್ಯಮಂತ್ರಿಯವರಿಗೆ ಆ ಅಧಿಕಾರ ಕೊಟ್ಟಿದೆಯೇ ಎಂಬ ಪ್ರಶ್ನೆಗೆ, ‘ಈಗಾಗಲೇ ಅವರಿಗೆ ಆ ಅಧಿಕಾರ ಇದೆ’ ಎಂದು ಪ್ರತಿಕ್ರಿಯಿಸಿದರು.

ಇಂದಿನ ಸಭೆಯಲ್ಲಿ ಪ್ರಮುಖವಾಗಿ ನಾಲ್ಕಾರು ವಿಷಯಗಳ ಬಗ್ಗೆ ಚರ್ಚೆಯಾಯಿತು. ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಕ್ಷದ ಉಸ್ತುವಾರಿಗಳು ಚುನಾವಣೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಬಗ್ಗೆ ಕಾರ್ಯತಂತ್ರ ರೂಪಿಸಲು ಚರ್ಚಿಸಲಾಯಿತು ಎಂದು ಹೇಳಿದರು.

ಡಿ.5 ರಂದು ನಡೆಯುವ ರಾಜ್ಯ ಕಾರ್ಯಕಾರಿಣಿಯಲ್ಲಿ ಎರಡು ಮಹತ್ವದ ವಿಷಯಗಳ ಬಗ್ಗೆ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಲಾಗುವುದು. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ‘ಲವ್ ಜಿಹಾದ್’ ತಡೆಗೆ ಕಾಯ್ದೆ ಮಾಡುವಂತೆ ನಿರ್ಣಯಿಸಲಾಗುವುದು ಎಂದು ತಿಳಿಸಿದರು.

ಸಭೆ ಮುಗಿಸಿ ಹೊರ ಬಂದ ಯಡಿಯೂರಪ್ಪ ಕೆಲಕಾಲ ಏಕಾಂಗಿಯಾಗಿ ನಿಂತಿದ್ದರು. ಅವರ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.