ADVERTISEMENT

ದೆಹಲಿಗೆ ಬಂದ ಬಿಜೆಪಿ ನಾಯಕರ ದಂಡು

ಪಕ್ಷದ ರಾಷ್ಟ್ರೀಯ ಸಮಾವೇಶ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 19:38 IST
Last Updated 10 ಜನವರಿ 2019, 19:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ಶುಕ್ರವಾರದಿಂದ ಆರಂಭವಾಗಲಿರುವ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಬಿಜೆಪಿ ಶಾಸಕರು ರಾಷ್ಟ್ರ ರಾಜಧಾನಿಗೆ ದೌಡಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿ ಶುಕ್ರವಾರ ಮತ್ತು ಶನಿವಾರ ನಡೆಯಲಿರುವ ಸಮಾವೇಶದಲ್ಲಿ ರಾಷ್ಟ್ರದ ವಿವಿಧೆಡೆಗಳಿಂದ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಲೋಕಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಈ ಸಮಾವೇಶ ನಡೆಯಲಿದೆ. ಜನವರಿ 13ರಂದು ಭಾನುವಾರ ಪ್ರಧಾನಿ ಮೋದಿ ಅವರು ರಾಜ್ಯದ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಚರ್ಚಿಸಲಿದ್ದಾರೆ

ADVERTISEMENT

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ರಾಜ್ಯದ ಕೇಂದ್ರ ಸಚಿವರು, ಸಂಸದರು, ಮುಖಂಡರು ಭಾಗವಹಿಸಲಿದ್ದಾರೆ.

ಹಾಲಿ ಶಾಸಕರಾಗಿರುವ ಮಾಜಿ ಸಚಿವರಿಗೆ ಕರ್ನಾಟಕ ಭವನ–1ರಲ್ಲಿ ಹಾಗೂ ಶಾಸಕರಿಗೆ ಕರ್ನಾಟಕ ಭವನ 2 ಮತ್ತು 3ರಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಗುರುವಾರ ಸಂಜೆ ಶಾಸಕರು ದೆಹಲಿಗೆ ಬರಲಿದ್ದಾರೆ.

ಕಾಂಗ್ರೆಸ್‌ ಕಾರ್ಯತಂತ್ರ ಚರ್ಚೆ
ನವದೆಹಲಿ: ಇಲ್ಲಿನ ಗುರುದ್ವಾರ ರಖಬ್‌ಗಂಜ್‌ ರಸ್ತೆಯಲ್ಲಿರುವ ಪಕ್ಷದ ವಾರ್‌ ರೂಮ್‌ನಲ್ಲಿ ಗುರುವಾರ ಅಹಮದ್‌ ಪಟೇಲ್‌ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಅವರು ಭಾಗವಹಿಸಿದರು.

ಪಕ್ಷ ಸಂಘಟನೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಅಣಿಗೊಳಿಸುವ ಕುರಿತು ದಿನವಿಡೀ ನಡೆದ ಸಭೆಯಲ್ಲಿ ಚರ್ಚಿಸಲಾಯಿತು. ರಾಜ್ಯದಲ್ಲಿ ಕೆಪಿಸಿಸಿ ವತಿಯಿಂದ 13.34 ಲಕ್ಷ ಸದಸ್ಯತ್ವ ನೋಂದಣಿ ಮಾಡಲಾಗಿದೆ. ಈ ಕುರಿತ ವರದಿಯನ್ನು ಸಭೆಗೆ ಸಲ್ಲಿಸಲಾಗಿದೆ ಎಂದು ದಿನೇಶ್‌ ಗುಮಡೂರಾವ್‌ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಎ.ಕೆ. ಆಂಟನಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿ, ಸಲಹೆ– ಸೂಚನೆ ನೀಡಿದರು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.