ADVERTISEMENT

ಮೈತ್ರಿ ಸರ್ಕಾರ ಪತನಕ್ಕೂ ಮುನ್ನವೇ ಮಂತ್ರಿಗಿರಿಗೆ ಬಿಜೆಪಿ ಶಾಸಕರ ಲೆಕ್ಕಾಚಾರ

​ಪ್ರಜಾವಾಣಿ ವಾರ್ತೆ
Published 21 ಜುಲೈ 2019, 14:34 IST
Last Updated 21 ಜುಲೈ 2019, 14:34 IST
ಜಿ.ಎಚ್. ತಿಪ್ಪಾರೆಡ್ಡಿ.
ಜಿ.ಎಚ್. ತಿಪ್ಪಾರೆಡ್ಡಿ.   

ಚಿತ್ರದುರ್ಗ: ರಾಜ್ಯದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಪತನಗೊಳ್ಳುವುದಕ್ಕೂ ಮುನ್ನವೇ ಬಿಜೆಪಿಯಲ್ಲಿ ಮಂತ್ರಿ ಸ್ಥಾನಕ್ಕೆ ಲೆಕ್ಕಾಚಾರಗಳು ಶುರುವಾಗಿವೆ. ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಕೆಲವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದು, ಈ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಸಮ್ಮಿಶ್ರ ಸರ್ಕಾರ ವಿಶ್ವಾಸಮತ ಕಳೆದುಕೊಂಡರೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬುದು ಕಮಲ ಪಕ್ಷದ ಅಚಲ ನಂಬಿಕೆ. ಬಿಜೆಪಿ ಶಾಸಕರು ಆಯ್ಕೆಯಾಗಿರುವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಚಿವ ಸ್ಥಾನದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

‘ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ನೂತನ ಸರ್ಕಾರ ರಚನೆಯಾಗಲಿ ಎಂಬುದು ಜನರ ಆಶಯ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನದ ಆಕ್ಷಾಂಕ್ಷಿಗಳಲ್ಲಿ ನಾನೂ ಒಬ್ಬ. ಆರು ಬಾರಿ ಆಯ್ಕೆಯಾಗಿದ್ದು, ಪಕ್ಷದ ಹಿರಿಯ ಶಾಸಕ ಪಟ್ಟಿಯಲ್ಲಿಯಲ್ಲಿ ನನ್ನ ಹೆಸರೂ ಇದೆ’ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಚಿತ್ರದುರ್ಗ ಉಸ್ತುವಾರಿ ಸಚಿವರ ಹೊಣೆ ಜಿಲ್ಲೆಯ ಹೊರಗಿನವರಿಗೆ ಸಿಕ್ಕಿದ್ದೆ ಹೆಚ್ಚು. ಪಕ್ಷ ಅವಕಾಶ ಕಲ್ಪಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಬರಪೀಡಿತ ಪ್ರದೇಶಕ್ಕೆ ಕಾಯಕಲ್ಪ ನೀಡಿ, ನೀರಾವರಿ ಯೋಜನೆಗೆ ಒತ್ತು ನೀಡುತ್ತೇನೆ. ಹಿರಿತನದ ಆಧಾರದ ಮೇರೆಗೆ ಸಚಿವ ಸ್ಥಾನದ ಅವಕಾಶ ಸಿಗುತ್ತದೆ ಎಂಬ ನಂಬಿಕೆ ಇದೆ. ಸಿಗುವ ಹುದ್ದೆಯನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.