ADVERTISEMENT

ವಿಧಾನ ಪರಿಷತ್‌ ಸದಸ್ಯರ ಸಂಪುಟ ಸೇರ್ಪಡೆಗೆ ಹೈಕೋರ್ಟ್‌ ಆದೇಶದ ಮಿತಿ

ಆರ್‌. ಶಂಕರ್, ಎಚ್‌. ವಿಶ್ವನಾಥ್‌, ಎಂ.ಟಿ.ಬಿ. ನಾಗರಾಜ್‌ ಪ್ರಕರಣ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 19:07 IST
Last Updated 11 ನವೆಂಬರ್ 2020, 19:07 IST
ವಿಧಾನಸಭೆ–ಸಾಂದರ್ಭಿಕ ಚಿತ್ರ
ವಿಧಾನಸಭೆ–ಸಾಂದರ್ಭಿಕ ಚಿತ್ರ   

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯರಾದ ಆರ್‌. ಶಂಕರ್‌, ಎ.ಎಚ್‌. ವಿಶ್ವನಾಥ್‌ ಮತ್ತು ಎಂ.ಟಿ.ಬಿ. ನಾಗರಾಜ್‌ ಅವರ ಸಂಪುಟ ಸೇರ್ಪಡೆ ಸೇರಿದಂತೆ ಅವರ ಕುರಿತಾಗಿ ರಾಜ್ಯ ಸರ್ಕಾರವು ಕೈಗೊಳ್ಳುವ ಯಾವುದೇ ನಿರ್ಧಾರವು ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಬಳಿಕ ಹೈಕೋರ್ಟ್‌ ನೀಡುವ ಆದೇಶದ ವ್ಯಾಪ್ತಿಗೆ ಒಳಪಟ್ಟಿರುತ್ತದೆ ಎಂದು ನ್ಯಾಯಾಲಯ ಬುಧವಾರ ಹೇಳಿದೆ.

ಮೂವರನ್ನೂ ವಿಧಾನ ಪರಿಷತ್‌ ಸದಸ್ಯರನ್ನಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌, ‘ಲಭ್ಯವಿರುವ ಮಾಹಿತಿ ಪ್ರಕಾರ ಮೂವರನ್ನೂ ಸಚಿವರನ್ನಾಗಿ ನೇಮಿಸುವ ಸಾಧ್ಯತೆ ಇದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದಂತೆ ಆದೇಶ ಹೊರಡಿಸಬೇಕು’ ಎಂದು ಕೋರಿದರು. ಆಗ ವಿಭಾಗೀಯ ಪೀಠ, ಮುಂದಿನ ಯಾವುದೇ ನಿರ್ಧಾರ ತನ್ನ ಆದೇಶದ ವ್ಯಾಪ್ತಿಗೆ ಒಳಪಟ್ಟಿರಲಿದೆ ಎಂದು ತಿಳಿಸಿತು.

ADVERTISEMENT

ನ.19ಕ್ಕೆ ವಿಚಾರಣೆ ಮುಂದೂಡಿದ ವಿಭಾಗೀಯ ಪೀಠ, ಅರ್ಜಿದಾರರ ಆರೋಪಗಳಿಗೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.