ADVERTISEMENT

ಅರುಣ್‌ಸಿಂಗ್‌ ಇಂದಿನಿಂದ ರಾಜ್ಯ ಪ್ರವಾಸ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 21:46 IST
Last Updated 29 ಆಗಸ್ಟ್ 2021, 21:46 IST
ಅರುಣ್‌ಸಿಂಗ್‌
ಅರುಣ್‌ಸಿಂಗ್‌   

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್‌ಸಿಂಗ್‌ ರಾಜ್ಯದ ನಾಲ್ಕು ದಿನಗಳ ಪ್ರವಾಸಕ್ಕಾಗಿ ಸೋಮವಾರ (ಆ.30) ನಗರಕ್ಕೆ ಆಗಮಿಸಲಿದ್ದಾರೆ. ಮೈಸೂರು, ಚನ್ನರಾಯಪಟ್ಟಣ, ಬೆಂಗಳೂರು ಮತ್ತು ಹುಬ್ಬಳ್ಳಿಗಳಲ್ಲಿ ನಿಗದಿಯಾಗಿರುವ ಪಕ್ಷದ ಸಭೆಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಬಳಿಕ ಅವರು ಇದೇ ಮೊದಲ ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಸೋಮವಾರ ಸಂಜೆ ಬೆಂಗಳೂರಿಗೆ ಬಂದು ಅಲ್ಲಿಂದ ನೇರವಾಗಿ ಮೈಸೂರಿಗೆ ತೆರಳಲಿದ್ದಾರೆ.

ಆ.31 ರಂದು ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅವರು ಮೈಸೂರು, ಮೈಸೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ, ಜಿಲ್ಲಾ ಕೋರ್‌ ಕಮಿಟಿ ಮತ್ತು ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ಧರಾಜು ತಿಳಿಸಿದ್ದಾರೆ.

ADVERTISEMENT

ಸೆಪ್ಟೆಂಬರ್‌ 1 ರಂದು ಹಾಸನ ಮತ್ತು ಮಂಡ್ಯ ಜಿಲ್ಲಾ ಪದಾಧಿಕಾರಿಗಳ ಸಭೆ ಚನ್ನರಾಯಪಟ್ಟಣದಲ್ಲಿ ನಡೆಯಲಿದೆ. ಜಿಲ್ಲಾ ಪ್ರಮುಖ ನಾಯಕರ ಸಭೆ, ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್‌ 2 ರಂದು ಬೆಂಗಳೂರಿನ ಮಲ್ಲೇಶ್ವರದ ಹವ್ಯಕ ಭವನದಲ್ಲಿ ಬೆಂಗಳೂರು, ದಕ್ಷಿಣ ಮತ್ತು ಕೇಂದ್ರ ಜಿಲ್ಲೆಯ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 2.45 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿ ಅಲ್ಲಿ ಅವರು ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ ಬೆಂಗಳೂರಿಗೆ ವಾಪಸ್‌ ಬರಲಿದ್ದು, ಆ ಸಂದರ್ಭದಲ್ಲಿ ಪಕ್ಷದ ರಾಜ್ಯ ನಾಯಕರು ಅರುಣ್‌ಸಿಂಗ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಸೆ.3 ರ ಬೆಳಿಗ್ಗೆ ಅವರು ದೆಹಲಿಗೆ ಹಿಂತಿರುಗುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.