ಬೆಂಗಳೂರು: ‘ಮದ್ದೂರಿನಲ್ಲಿ ಮಸೀದಿ ಮುಂದೆ ಮೆರವಣಿಗೆ ಹೋದಾಗ ಸಣ್ಣ ಗಲಾಟೆ ನಡೆದಿದೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಗುಂಪು ಕಟ್ಟಿ ಗಲಾಟೆ ಮಾಡಲು ಹೋದಾಗ ಲಘು ಲಾಠಿ ಪ್ರಹಾರ ಮಾಡಲಾಗಿದೆ. ಅನವಶ್ಯಕವಾಗಿ ಬಿಜೆಪಿ ಪ್ರತಿಭಟನೆ ಮಾಡುವುದು ಏಕೆ? ಇದು ಪ್ರಚೋದನೆ ಅಲ್ಲವೇ? ಪ್ರಚೋದನೆ ಮಾಡುವುದರಲ್ಲಿ ಬಿಜೆಪಿಗರು ನಿಸ್ಸೀಮರು’ ಎಂದು ದೂರಿದರು.
‘ಸರ್ಕಾರ ಪತನವಾಗಲಿದೆ’ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಕುಮಾರಸ್ವಾಮಿಯವರ ಪಕ್ಷ ಪತನದ ಹಾದಿ ಹಿಡಿಯದಂತೆ ನೋಡಿಕೊಳ್ಳಲಿ’ ಎಂದು ತಿರುಗೇಟು ನೀಡಿದರು.
ದಸರಾ ಉದ್ಘಾಟಿಸಲು ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕೋರ್ಟ್ ಮೊರೆ ಹೋಗಿರುವ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ, ‘ಕೋರ್ಟ್ ತೀರ್ಮಾನ ಮಾಡಲಿ. ನಿಸಾರ್ ಅಹಮದ್, ಮಿರ್ಜಾ ಇಸ್ಮಾಯಿಲ್ ದಸರಾ ಉದ್ಘಾಟಿಸಿದಾಗ ಯಾರೂ ಕೋರ್ಟ್ಗೆ ಹೋಗಿರಲಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.