ಹೊಸಪೇಟೆ: ‘ಅನ್ಯ ಪಕ್ಷದ ಶಾಸಕರನ್ನು ಪಕ್ಷಾಂತರ ಮಾಡಲು ₹30 ಕೋಟಿ ಕೊಟ್ಟಿದ್ದ ಬಿಜೆಪಿ, ಅನರ್ಹ ಶಾಸಕರನ್ನು ಗೆಲ್ಲಿಸಿಕೊಂಡು ಬರಲು ಪ್ರತಿ ಕ್ಷೇತ್ರಕ್ಕೆ ₹20 ಕೋಟಿ ವೆಚ್ಚ ಮಾಡುತ್ತಿದೆ. ಕಪ್ಪು ಹಣದಿಂದ ಇದೆಲ್ಲ ಮಾಡುತ್ತಿದ್ದಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಗುರುವಾರ ಸಂಜೆ ನಗರದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಕಪ್ಪು ಹಣ, ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಆದರೆ, ಶಾಸಕರ ಖರೀದಿಗೆ ಹಣ ಎಲ್ಲಿಂದ ಬಂತು ಎಂಬುದನ್ನು ಜನತೆಗೆ ತಿಳಿಸಬೇಕು. ಕಪ್ಪು ಹಣ ಅವರ ಬಳಿ ಇರುವುದರಿಂದಲೇ ದೇಶದ ಹಲವು ರಾಜ್ಯಗಳಲ್ಲಿ ಶಾಸಕರಿಗೆ ಆಮಿಷವೊಡ್ಡಿ, ಅವರನ್ನು ಖರೀದಿಸುತ್ತಿದ್ದಾರೆ’ ಎಂದರು.
‘ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್, ಅಕ್ರಮ ಗಣಿಗಾರಿಕೆಯಿಂದ ಗಳಿಸಿದ ಹಣದಿಂದ ಚುನಾವಣೆ ಗೆಲ್ಲಲು ಎದುರು ನೋಡುತ್ತಿದ್ದಾರೆ. ಮತದಾರರು ಅವರ ಹಣ ಪಡೆದು, ಸಜ್ಜನ, ಪ್ರಾಮಾಣಿಕರಾದ ರಾಜಮನೆತನಕ್ಕೆ ಸೇರಿದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.