ಬೆಂಗಳೂರು: ಕಾಂಗ್ರೆಸ್ ಪಕ್ಷ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಮತ್ತು ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರಿಯಾಂಕಾ ಗಾಂಧಿ ವಾದ್ರಾ ಏಕೆ ತುಟ್ಟಿ ಬಿಚ್ಚುತ್ತಿಲ್ಲ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಪ್ರಶ್ನಿಸಿದ್ದಾರೆ.
ರಾಜಸ್ತಾನದಲ್ಲಿ ಕಾಂಗ್ರೆಸ್ ಸರ್ಕಾರ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ದೇಶದ ಇತರೆ ಕಡೆಗಳಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ಬಗ್ಗೆ ಮಾತನಾಡುವ ಪ್ರಿಯಾಂಕ ರಾಜಸ್ತಾನದಲ್ಲಿ ಹೆಚ್ಚುತ್ತಿರುವ ಮಾನಭಂಗ ಮತ್ತು ದೌರ್ಜನ್ಯಗಳಿಗೆ ಯಾರನ್ನು ಹೊಣೆ ಮಾಡುತ್ತೀರಿ ಎಂದೂ ಅವರು ಪ್ರಶ್ನಿಸಿದ್ದಾರೆ.
ರಾಜಸ್ತಾನದಲ್ಲಿ ಗುರುವಾರ ಆಳ್ವಾರ್ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ನಡೆದಿದೆ. ಇದು ಅತ್ಯಂತ ಹೇಯ ಕೃತ್ಯ. ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲವಾಗಿದೆ. ಆದರೆ, ಪ್ರಿಯಾಂಕ ಗಾಂಧಿ ಮತ ಬೇಟೆಗಾಗಿ ಮಾತ್ರ ಹೆಣ್ಣು ಮಕ್ಕಳ ಬಗ್ಗೆ ತೋರಿಕೆಯ ಕಾಳಜಿ ವ್ಯಕ್ತಪಡಿಸುತ್ತಿದ್ದಾರೆ. ರಾಜಸ್ತಾನದ ಮುಖ್ಯಮಂತ್ರಿಯನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.