ADVERTISEMENT

ಸಾಲಮನ್ನಾ ಸುಳ್ಳು ಘೋಷಣೆ: ಬಿ.ಎಸ್. ಯಡಿಯೂರಪ್ಪ ಆರೋಪ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2019, 11:25 IST
Last Updated 25 ಫೆಬ್ರುವರಿ 2019, 11:25 IST
   

ಹಾವೇರಿ:ಸಾಲಮನ್ನಾ ಮಾಡಿದ್ದೇವೆ ಎಂದು ಸುಳ್ಳು ಘೋಷಣೆ ಮಾಡುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಇತ್ತ ಅಭಿವೃದ್ಧಿ ಕಾರ್ಯ, ನೀರಾವರಿ, ಬರ ಪರಿಹಾರ ಕಾಮಗಾರಿಗಳಿಗೂ ಸಮರ್ಪಕ ಅನುದಾನ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.

‘ಅತ್ತ ಸಾಲಮನ್ನಾವನ್ನೂ ಮಾಡಲಿಲ್ಲ, ಅದರ ನೆಪದಲ್ಲಿ ಅಭಿವೃದ್ಧಿಗೂ ಹಣ ನೀಡುತ್ತಿಲ್ಲ. ಒಟ್ಟಾರೆ, ಆಡಳಿತವೇ ಕುಸಿದಿದೆ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರರು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಒಡೆದ ಮನೆಯಾಗಿದೆ. ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನವನ್ನು ಮೂರು ಬಾರಿ ತಪ್ಪಿಸಿದೆ. ಕಾಂಗ್ರೆಸ್‌ನಿಂದ ದಲಿತರಿಗೆ ಅನ್ಯಾಯವಾಗಿದೆ ಎಂಬ ನೋವು ಆ ಸಮುದಾಯದಲ್ಲಿದೆ. ಹೀಗಾಗಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ದಲಿತ ಸಮುದಾಯದ ಸಭೆಗಳನ್ನು ನಡೆಸುತ್ತಾ ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.

ADVERTISEMENT

ಕಾಂಗ್ರೆಸ್ –ಜೆಡಿಎಸ್ ಸಂಬಂಧವೂ ಹಳಸಿದ್ದು,ಕಾಂಗ್ರೆಸ್‌ನ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಒಪ್ಪಿಕೊಳ್ಳುತ್ತಿಲ್ಲ ಎಂದರು.

ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರಗಳನ್ನು ಗೆಲ್ಲುವುದೇ ನಮ್ಮ ಗುರಿ. ಮುಂದಿನ ಚುನಾವಣೆಯ ಕಾರ್ಯ ಯೋಜನೆಗಳ ಬಗ್ಗೆ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್ ಜೊತೆ ಚರ್ಚೆ ನಡೆಸುತ್ತೇವೆ ಎಂದ ಅವರು, ಮಾ.7ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರ್ಗಿಗೆ ಬರುತ್ತಾರೆ. ಹಾವೇರಿಯಲ್ಲಿ ಸಂಸದ ಶಿವಕುಮಾರ್ ಉದಾಸಿ ಭಾರಿ ಅಂತರದಿಂದ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದರು.

ಯಾರೋ ಒಂದಿಬ್ಬರು ‘ಗೋ ಬ್ಯಾಕ್ ಶೋಭಾ’ ಎಂದು ಹೇಳಿದ್ದಾರೆ. ಆದರೆ, ಸಂಸದೆ ಶೋಭಾ ಕರಂದ್ಲಾಜೆ ಅವರು ರಾಜ್ಯ, ಪಕ್ಷ ಹಾಗೂ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿರುವುದು ರಾಜ್ಯದ ಜನತೆಗೆ ಗೊತ್ತಿದೆ. ಯಾರೋ ಒಂದಿಬ್ಬರು ಹಗುರವಾಗಿ ಮಾತನಾಡಿದರೆ, ಮಾಧ್ಯಮದಲ್ಲಿ ದೊಡ್ಡದು ಮಾಡುವ ಅಗ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಂಸದ ಶಿವಕುಮಾರ್ ಉದಾಸಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.