ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸಾರಿಗೆ ನಿಗಮಗಳನ್ನು ಸಮಾಧಿ ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, 'ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಸಾರಿಗೆ ಸಚಿವರಿಗೆ ತಮ್ಮ ಖಾತೆಯ ಆರ್ಥಿಕ ಸ್ಥಿತಿಗತಿ ಅರ್ಥವಾಗಿಲ್ಲ. ನಿಗಮ ಲಾಭದಲ್ಲಿದೆ ಎಂದು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಐಎಎಸ್ ಅಧಿಕಾರಿ ಉಪೇಂದ್ರ ತ್ರಿಪಾಠಿ ಅವರು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅವಧಿಯಲ್ಲಿ ಸಂಸ್ಥೆಯನ್ನು ಲಾಭಕ್ಕೆ ತಂದಿದ್ದರು. ₹700 ಕೋಟಿ ಮೊತ್ತವನ್ನು ಠೇವಣಿ ಇಟ್ಟಿದ್ದರು. ಅಂತಹ ಆಸ್ತಿಯನ್ನು ಮಾರಾಟ ಮಾಡಲು ಸರ್ಕಾರ ಹೊರಟಿದೆ' ಎಂದು ದೂರಿದರು.
ಡಿಸೆಂಬರ್ ಅಂತ್ಯಕ್ಕೆ ಸಾರಿಗೆ ನಿಗಮಕ್ಕೆ ಸರ್ಕಾರ ₹7,401 ಕೋಟಿ ಕೊಡಬೇಕಿದೆ. ಭವಿಷ್ಯನಿಧಿಗೆ ₹2,500 ಕೋಟಿ, ನಿವೃತ್ತ ನೌಕರರ ಬಾಕಿ ₹362 ಕೋಟಿ, ಸಿಬ್ಬಂದಿ ಬಾಕಿ ಪಾವತಿ, ಸರಬರಾಜುದಾರರ ಬಿಲ್, ಇಂಧನ ಬಾಕಿ ಸೇರಿ ₹1,000 ಕೋಟಿ, ರಜೆ ನಗದೀಕರಣ ₹700 ಕೋಟಿ, ಒಟ್ಟು ಸಾಲದ ಬಾಕಿ ಹೊಣೆಗಾರಿಕೆ ಸೇರಿ ₹5,614 ಕೋಟಿ ಆಗುತ್ತದೆ. ಬಾಕಿ ಮೊತ್ತಕ್ಕೆ ಶೇ 10.5 ಬಡ್ಡಿ ಕಟ್ಟಬೇಕಿದೆ ಎಂದು ವಿವರ ನೀಡಿದರು.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ₹ 3,650 ಕೋಟಿ ಹೊರೆಯಾಗುತ್ತಿದೆ ಎಂದು ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ. ಶೇ 15ರಷ್ಟು ಪ್ರಯಾಣದರ ಹೆಚ್ಚಳಕ್ಕೆ ಸಭೆ ನಿರ್ಣಯಿಸಿದೆ. ದರ ಪರಿಷ್ಕರಣೆಯಾದರೂ ನಿಗಮಗಳು ₹ 1,800 ಕೋಟಿ ನಷ್ಟ ಅನುಭವಿಸುತ್ತದೆ ಎಂದು ಸಭೆಯಲ್ಲಿ ಚರ್ಚೆಯಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.