ಬಿ.ವೈ.ವಿಜಯೇಂದ್ರ
ಬೆಂಗಳೂರು: ‘ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ಗಮನ ಸೆಳೆದರು. ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ‘ ಎಂದು ಅವರು ಆಕ್ಷೇಪಿಸಿದರು.
‘ಕೆಎಸ್ಆರ್ಟಿಸಿ ಮತ್ತಿತರ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕೊಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹಳ ತಿಂಗಳುಗಳಿಂದ ಆರ್ಥಿಕ ಮುಗ್ಗಟ್ಟು ಇದ್ದು, ಸಮಸ್ಯೆ ಉಲ್ಬಣವಾಗಿದೆ. ಹಾಗಾಗಿ ಅವರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳಿಗೆ ಸಾಧ್ಯವಾಗುತ್ತಿಲ್ಲ’ ಎಂದು ತಿಳಿಸಿದರು.
‘ಮುಖ್ಯಮಂತ್ರಿಗಳು ತಡ ಮಾಡದೇ, ತಕ್ಷಣವೇ ಕಾರ್ಮಿಕರ ಮತ್ತು ಅಧಿಕಾರಿಗಳ ಸಭೆ ಕರೆಯಬೇಕು. ಅವರ ಸಮಸ್ಯೆಗೆ ಪರಿಹಾರ ನೀಡಬೇಕು. ಜನಸಾಮಾನ್ಯರಿಗೆ ತೊಂದರೆ ಆಗುವುದನ್ನು ತಪ್ಪಿಸಬೇಕು’ ಎಂದು ಒತ್ತಾಯಿಸಿದರು.
‘ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರೂ ಕುಳಿತು ಸಮಸ್ಯೆಗೆ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.
‘ರಾಹುಲ್ ಗಾಂಧಿಯವರ ಬೆಂಗಳೂರು ಭೇಟಿ ಕಾರಣಕ್ಕಾಗಿ ಮುಖ್ಯಮಂತ್ರಿಗಳು ನಿನ್ನೆ ಸಾರಿಗೆ ನೌಕರರ ಸಭೆ ಕರೆದಿದ್ದರು’ ಎಂದೂ ಅವರು ಆರೋಪಿಸಿದರು.
‘ಏನು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ? ನಿನ್ನೆ ಸುತ್ತೋಲೆಯನ್ನೂ ಹೊರಡಿಸಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಬಸ್ಗಳೂ ಬೇಕೆಂದು ನಿನ್ನೆ ಪತ್ರ ಬರೆದಿದ್ದಾರೆ. ಮೊದಲೇ ವ್ಯವಸ್ಥೆ ಹಾಳು ಮಾಡಲು ಹೊರಟಿದ್ದಾರೆ. ಈಗ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಸಮಸ್ಯೆ ಹುಟ್ಟಿಸಲು ಹೊರಟಿದ್ದೀರಿ’ ಎಂದು ಅವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.
‘ಗಡ್ಡಕ್ಕೆ ಬೆಂಕಿ ಹತ್ತಿಕೊಂಡಾಗ ಸಮಸ್ಯೆ ಪರಿಹರಿಸಲು ಹೊರಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ; ಮುಷ್ಕರ ಈಗಾಗಲೇ ಪ್ರಾರಂಭವಾಗಿದೆ. ಸಂಬಂಧಿತರನ್ನು ಕರೆದು ಸಮಸ್ಯೆ ಪರಿಹರಿಸಬೇಕು’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.