ಬೆಂಗಳೂರು: ‘ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ತಕ್ಷಣ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು’ ಎಂದು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಸಂಸ್ಕೃತಿ ರಕ್ಷಣೆ ಬಗ್ಗೆ ದೊಡ್ಡ ದೊಡ್ಡ ಭಾಷಣ ಬಿಗಿಯುತ್ತಾರೆ. ಆದರೆ, ಕಲ್ಲಡ್ಕ ಪ್ರಭಾಕರ ಭಟ್ಟರು ಮೈಸೂರು ಮತ್ತು ಶ್ರೀರಂಗಪಟ್ಟಣದಲ್ಲಿ ನೀಡಿರುವ ಹೇಳಿಕೆ ಕೀಳು ಅಭಿವ್ಯಕ್ತಿಯಿಂದ ಕೂಡಿದ್ದಾಗಿದೆ. ಕೋಮುದ್ವೇಷ ಹರಡಲು ಅವರು ಪ್ರಯತ್ನಿಸುತ್ತಿದ್ದಾರೆ’ ಎಂದು ದೂರಿದರು.
‘ಸಮುದಾಯದವರು ಒಟ್ಟಾಗಿ ದೂರು ನೀಡುವ ಮೂಲಕ ಎಫ್ಐಆರ್ ದಾಖಲಿಸಲಾಗಿದೆ. ಅದರ ಆಧಾರದಲ್ಲಿ ಕೂಡಲೇ ಅವರನ್ನು ಬಂಧಿಸಬೇಕು. ಸರ್ವಜನಾಂಗದ ಶಾಂತಿಯ ತೋಟ ಎಂಬ ಶೀರ್ಷಿಕೆಯ ಪ್ರಣಾಳಿಕೆ ಜನರ ಮುಂದಿಟ್ಟು ಮತ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದರಂತೆ ಕೋಮು ದ್ವೇಷ ಹರಡುವ, ಶಾಂತಿ ಕದಡುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.