
ಹೈಕೋರ್ಟ್
ಬೆಂಗಳೂರು: ‘ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ರೈಲ್ವೆ ಕಂಪನಿಯಾಗಿದ್ದು, ಕೇಂದ್ರ ಸರ್ಕಾರದ ಒಪ್ಪಿಗೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ, ಇದಕ್ಕೆ ಸಂಬಂಧಿಸಿದ ವ್ಯಾಜ್ಯಗಳು ಉಂಟಾದಲ್ಲಿ ಅವುಗಳನ್ನು ಕೈಗಾರಿಕಾ ವಿವಾದಗಳ ಕಾಯ್ದೆ ಅಡಿಯಲ್ಲಿ ಪರಿಹರಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆಯೇ ವಿನಃ ರಾಜ್ಯ ಸರ್ಕಾರಕ್ಕಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಕೈಗಾರಿಕಾ ವಿವಾದ ಕಾಯ್ದೆಯ ಅಡಿಯಲ್ಲಿ ಎಸ್ಮಾ ಜಾರಿ ಮಾಡಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬಿಎಂಆರ್ಸಿಎಲ್ ಮತ್ತು ಬಿಎಂಆರ್ಸಿಎಲ್ ನೌಕರರ ಸಂಘ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿದೆ.
ರಾಜ್ಯ ಸರ್ಕಾರ 2019ರಲ್ಲಿ ಬಿಎಂಆರ್ಸಿಎಲ್ ಸಾರ್ವಜನಿಕ ಉಪಯುಕ್ತವಾದ ಸೇವೆ ಎಂಬುದಾಗಿ ಹೊರಡಿಸಿದ್ದ ಮತ್ತು ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿಯಲ್ಲಿ ಬಿಎಂಆರ್ಸಿಎಲ್ ಸೇವೆಗಳನ್ನು ಅತ್ಯವಶ್ಯಕ ಸೇವೆಗಳು ಎಂದು 2017ರಲ್ಲಿ ಹೊರಡಿಸಿದ್ದ ಅಧಿಸೂಚನೆಗಳನ್ನು ನ್ಯಾಯಪೀಠ ರದ್ದುಗೊಳಿಸಿದೆ.
‘ಬಿಎಂಆರ್ಸಿಎಲ್ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ ಶೇ 50ರಷ್ಟು ಷೇರುಗಳನ್ನು ಹೊಂದಿವೆ. ಆದಾಗ್ಯೂ, ಪ್ರಮುಖ ಆಡಳಿತಾತ್ಮಕ ಕ್ರಮಗಳಲ್ಲಿ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮವಾಗಿರಲಿದೆ. ರಾಜ್ಯ ಸರ್ಕಾರ ಯಾವುದಾದರೂ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳಬೇಕಾದಲ್ಲಿ ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದ್ದರಿಂದ ಮೆಟ್ರೊ ಸೇವೆಯನ್ನು ಎಸ್ಮಾ ಕಾಯಿದೆಯಡಿ ಅತ್ಯವಶ್ಯಕ ಸೇವೆ ಎಂದು ಘೋಷಣೆ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.