ADVERTISEMENT

ರಾಜ್ಯದ ಏಳು ಜಿಲ್ಲೆಗಳ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2021, 20:15 IST
Last Updated 24 ನವೆಂಬರ್ 2021, 20:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ (ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು) ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೀದರ್‌, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಯ ಒಟ್ಟು 14,44,322 ಮಕ್ಕಳಿಗೆ ಬಿಸಿಯೂಟದೊಂದಿಗೆ ಪ್ರತಿ ತಿಂಗಳು 12 ಮೊಟ್ಟೆ, ಮೊಟ್ಟೆ ಸೇವಿಸದವರಿಗೆ ಮೊಟ್ಟೆಯ ಬದಲು‌ ಬಾಳೆಹಣ್ಣು ನೀಡಲು ತೀರ್ಮಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಡಿಸೆಂಬರ್‌ ತಿಂಗಳಿನಿಂದ 2020ರ ಮಾರ್ಚ್‌ 30ರವರೆಗೆ (ಒಟ್ಟು ನಾಲ್ಕು ತಿಂಗಳು) ಈ ಯೋಜನೆ ಜಾರಿಯಲ್ಲಿ ಇರಲಿದೆ.‌ ಸುಮಾರು ₹ 39.86 ಕೋಟಿ ವೆಚ್ಚ ಅಂದಾಜಿಸಲಾಗಿದೆ.

ADVERTISEMENT

ಅಪೌಷ್ಟಿಕತೆ, ರಕ್ತಹೀನತೆ ಹೊಂದಿರುವ ಶಾಲಾ ಮಕ್ಕಳ ಶೇಕಡಾವಾರು ಪ್ರಮಾಣ ಯಾದಗಿರಿಯಲ್ಲಿ ಅತೀ ಹೆಚ್ಚು ಶೇ 74ರಷ್ಟಿದೆ. ಉಳಿದಂತೆ, ಕಲಬುರಗಿಯಲ್ಲಿ ಶೇ 72.4, ಬಳ್ಳಾರಿ ಶೇ 72.3, ಕೊಪ್ಪಳ ಶೇ 70.7, ರಾಯಚೂರು ಶೇ 70.6, ಬೀದರ್‌ ಶೇ 69.1, ವಿಜಯಪುರ ಶೇ 68ರಷ್ಟಿದೆ. 6ರಿಂದ 15ರವರೆಗಿನ ವಯೋಮಾನದವರೆಗಿನ ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತ ಹೀನತೆ ಹಾಗೂ ಪೋಷಕಾಂಶಗಳ ಕೊರತೆ ನಿವಾರಿಸುವ ಉದ್ದೇಶದಿಂದ ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆಯಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.