ಬೆಂಗಳೂರು: ‘ಗೋವುಗಳನ್ನು ಏಕೆ ಕಡಿಯಬಾರದು’ ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರ ಹೇಳಿಕೆ ಖಂಡನೀಯ. ಇದರಿಂದಾಗಿ ರಾಜ್ಯದಲ್ಲಿ ಗೋ ಕಳ್ಳಸಾಗಾಣಿಕೆ ಮತ್ತು ಗೋಹತ್ಯೆ ಹೆಚ್ಚಾಗಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,‘ ಗೋವಿನೊಂದಿಗೆ ಭಾರತೀಯರು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿರುವ ಗೋವನ್ನು ಪೂಜಿಸುತ್ತೇವೆ. ವೆಂಕಟೇಶ್ ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ತಮಗೆ ನೀಡಿರುವ ಖಾತೆ ಬದಲಿಸಲಿ ಎಂದೊ ಅಥವಾ ಹೈಕಮಾಂಡ್ ಮೆಚ್ಚಿಸುವ ಉದ್ದೇಶಕ್ಕೊ’ ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.
‘ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾಗಾಂಧಿ. ಇವರು ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವು ರಾಜ್ಯಗಳಲ್ಲಿ ಜಾರಿ ಮಾಡಲಾಗಿದೆ. ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವು ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ ಮಾಡುವ ಕಾನೂನು ಬಾಹಿರ ಕಸಾಯಿಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ’ ಎಂದರು.
‘ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ. ಈ ರೀತಿಯ ಹೇಳಿಕೆಗಳನ್ನು ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿಯವರು ಸಚಿವರಿಗೆ ಸೂಕ್ತ ಸಲಹೆ ನೀಡುವ ಅವಶ್ಯಕತೆ ಇದೆ’ ಎಂದು ಬೊಮ್ಮಾಯಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.