ADVERTISEMENT

ಗಡಿ ಪ್ರದೇಶದಲ್ಲಿ ಕೌಶಲ ಅಭಿವೃದ್ಧಿಗೆ ಆದ್ಯತೆ; ಡಾ.ಸಿ. ಸೋಮಶೇಖರ್

ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 3:37 IST
Last Updated 23 ಸೆಪ್ಟೆಂಬರ್ 2021, 3:37 IST
ಡಾ.ಸಿ. ಸೋಮಶೇಖರ್
ಡಾ.ಸಿ. ಸೋಮಶೇಖರ್   

ಬೆಂಗಳೂರು: ‘ಗಡಿ ಪ್ರದೇಶಗಳಲ್ಲಿ ಕೌಶಲ ಅಭಿವೃದ್ಧಿ ಹಾಗೂ ಅನೌಪಚಾರಿಕ ಶಿಕ್ಷಣದ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು’ ಎಂದುಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಡಾ.ಸಿ. ಸೋಮಶೇಖರ್ ತಿಳಿಸಿದರು.

ಬುಧವಾರ ಇಲ್ಲಿ ನಡೆದ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಗಡಿ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

ಬೀದರ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಅಲ್ಲಿನ ಬಿದರಿ ಕಲೆ, ಸಾಹಿತ್ಯ, ಸಂಸ್ಕೃತಿ, ಜಾನಪದ, ಭಾಷೆ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಈ ಕಾರ್ಯಕ್ಕೆ ವಿಶೇಷ ಪರಿಣಿತ ಶಿಕ್ಷಕರನ್ನು ಗುರುತಿಸಿ, ಅವರಿಗೆ ತರಬೇತಿ ನೀಡಬೇಕು. 50 ಗಡಿ ಗ್ರಾಮಗಳ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಅನೌಪಚಾರಿಕ ಶಿಕ್ಷಣ ನೀಡಲು ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಗಡಿ ಭಾಗದ ಕಲಾವಿದರನ್ನು ಬಳಸಿಕೊಂಡು, ಲಾವಣಿ, ಬಯಲಾಟ, ನಾಟಕ, ಕಲೆ, ಹರಿಕಥೆ ಸೇರಿದಂತೆ ಗಡಿ ಭಾಗದ ವಿಶೇಷ ಕಲೆಗಳನ್ನು ಯುವಕರಿಗೆ ಕಲಿಸಬೇಕು ಎಂದು ತೀರ್ಮಾನಿಸಲಾಯಿತು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ಈ ಯೋಜನೆ ಕೈಗೊಳ್ಳಲು ಮೊದಲ ಹಂತದಲ್ಲಿ ₹ 20 ಲಕ್ಷ ಅನುದಾನ ನೀಡಲು ನಿರ್ಧರಿಸಲಾಯಿತು.

ADVERTISEMENT

ಮೈಸೂರು, ಧಾರವಾಡ, ಕಲಬುರ್ಗಿ, ಶಿವಮೊಗ್ಗ ಮತ್ತು ದಾವಣಗೆರೆ ರಂಗಾಯಣಗಳ ಮೂಲಕ ಕನ್ನಡ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿನಲ್ಲಿ ಸ್ವಾತಂತ್ರ ಹೋರಾಟಗಾರರನ್ನು ಪರಿಚಯಿಸುವ ಗಡಿ ನಾಟಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ನಿರ್ಧರಿಸಲಾಯಿತು.

ಗಡಿ ಭಾಗದಲ್ಲಿ ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸ್ಥಿತಿಗತಿಗಳ ಬಗ್ಗೆ ವಿಚಾರ ಸಂಕಿರಣ ಹಮ್ಮಿಕೊಳ್ಳಬೇಕು. ಮಹಿಳಾ ಅಭಿವೃಧ್ಧಿ ನಿಗಮದ ಮೂಲಕ ಮಹಿಳಾ ಗಡಿ ಉತ್ಸವಗಳನ್ನು ಆಚರಿಸಬೇಕು.ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಕನ್ನಡ ಚಿತ್ರಕತೆ, ಸಂಭಾಷಣೆ, ಛಾಯಾಗ್ರಹಣ, ಸಂಗೀತ ಇತ್ಯಾದಿಗಳ ಬಗ್ಗೆಗಡಿ ಭಾಗದಲ್ಲಿ ಶಿಬಿರಗಳನ್ನು ಏರ್ಪಡಿಸಿ, ಕೌಶಲ್ಯ ಅಭಿವೃದ್ಧಿಪಡಿಸಬೇಕು ಎಂದು ತೀರ್ಮಾನಿಸಲಾಯಿತು.

ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಏರ್ಪಡಿಸಲು, ಗಡಿ ಹಂಚಿಕೊಂಡ ರಾಜ್ಯಗಳಲ್ಲಿ ಕನ್ನಡಿಗರ ಸಮಸ್ಯೆಗಳು, ಸವಾಲುಗಳ ಬಗ್ಗೆಯೂ ಚರ್ಚಿಸಬೇಕು.ಗಡಿ ಭಾಗದ ಎಲ್ಲ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಗಡಿ ಜಾನಪದ ಅಧ್ಯಯನ ನಡೆಸಲು ನಿರ್ಣಯಿಸಲಾಯಿತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ವಿ. ವಸಂತಕುಮಾರ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಹಾಗೂ ಅಧಿಕಾರಿಗಳು ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.