ಬೆಂಗಳೂರು: ಕೋವಿಡ್ನಿಂದ ಮೃತಪಟ್ಟಬಡ ಸದಸ್ಯನ ಕುಟುಂಬದವರಿಗೆ ತಲಾ ₹1ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಅವರು, ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು ಎಂದರು.
ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಇದು ಅನ್ವಯವಾಗುತ್ತದೆ. ಅದರಲ್ಲೂ ವಯಸ್ಕರು ಮೃತಪಟ್ಟಿದ್ದರೆ ಅವರ ಹೆಸರಿನಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಇದಕ್ಕಾಗಿ ಸರ್ಕಾರಕ್ಕೆ ₹250 ರಿಂದ ₹300 ಕೋಟಿ ಬೇಕಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು.
ಕೋವಿಡ್ನಿಂದಾಗಿ ಸಾಕಷ್ಟು ಕುಟುಂಬಗಳಲ್ಲಿ ದುಡಿಯುವ ವ್ಯಕ್ತಿಗಳೇ ಮೃತಪಟ್ಟಿದ್ದಾರೆ. ಇದರಿಂದ ಕುಟುಂಬಗಳು ಸಂಕಷ್ಟಕ್ಕೆ ತುತ್ತಾಗಿವೆ. ಅವರ ನೆರವಿಗಾಗಿ ಈ ಪರಿಹಾರ ನೀಡಲಾಗುತ್ತಿದೆ. ಈ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ದೇಶದಲ್ಲಿ ಮೊದಲ ಬಾರಿಗೆ ಈ ರೀತಿಯ ಪರಿಹಾರ ನೀಡಲಾಗುತ್ತಿದೆ. ಬೇರೆ ಯಾವುದೇ ರಾಜ್ಯಗಳಲ್ಲೂ ಕೋವಿಡ್ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಿಲ್ಲ ಎಂದರು.
ರಾಜ್ಯದಲ್ಲಿ ಹಣಕಾಸು ಸ್ಥಿತಿ ಉತ್ತಮವಾಗಿರುವುದರಿಂದಲೇ ಪರಿಹಾರ ನೀಡಲು ಸಾಧ್ಯವಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.