ADVERTISEMENT

ಮೈಸೂರು ಪೇಂಟ್ಸ್ ಕಾರ್ಖಾನೆಗೆ ಶೀಘ್ರದಲ್ಲಿ ಬ್ರ್ಯಾಂಡ್ ವರ್ಚಸ್ಸು: ಸಚಿವ MB ಪಾಟೀಲ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2024, 16:16 IST
Last Updated 11 ಮಾರ್ಚ್ 2024, 16:16 IST
ಎಂ.ಬಿ. ಪಾಟೀಲ
ಎಂ.ಬಿ. ಪಾಟೀಲ   

ಬೆಂಗಳೂರು: ‘ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟು ಹೆಚ್ಚಿಸಿ ‘ಬ್ರ್ಯಾಂಡ್’ ವರ್ಚಸ್ಸು ನೀಡಲು ಯೋಜನೆ ರೂಪಿಸಲಾಗಿದೆ’ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಕಾರ್ಖಾನೆಯ ಆಡಳಿತ ಮಂಡಳಿಯ ಸಭೆಯ ಬಳಿಕ ಮಾತನಾಡಿದ ಅವರು,‌ ‘ಕಾರ್ಖಾನೆಯು ಸದ್ಯಕ್ಕೆ ವಾರ್ಷಿಕ ₹ 34 ಕೋಟಿಯಿಂದ ₹ 35 ಕೋಟಿಯಷ್ಟು ವಹಿವಾಟು ನಡೆಸುತ್ತಿದೆ. ಲೋಕಸಭಾ ಚುನಾವಣೆ ಬಂದಿರುವುದರಿಂದ ಶಾಯಿ ತಯಾರಿಕೆಗೆ ಬೇಡಿಕೆ ಬಂದಿದೆ. ಈ ವರ್ಷ ವಹಿವಾಟು ₹ 77 ಕೋಟಿ ತಲುಪುವ ನಿರೀಕ್ಷೆಯಿದೆ’ ಎಂದರು.

‘ಮನೆ ಗೋಡೆಗೆ ಬಳಿಯುವಂತಹ ಬಣ್ಣಗಳನ್ನು ತಯಾರಿಸಲು ಸೂಚಿಸಲಾಗಿದೆ. ಮುಕ್ತ ಮಾರುಕಟ್ಟೆ ಅಲ್ಲದೆ, ಸರ್ಕಾರಿ ಕಟ್ಟಡಗಳು, ಶಾಲಾ- ಕಾಲೇಜು, ಹಾಸ್ಟೆಲ್‌ಗಳಿಗೆ ಬೇಕಾಗುವ ಬಣ್ಣ, ಎಮಲ್ಶನ್ ಇತ್ಯಾದಿಗಳನ್ನು ಈ ಕಾರ್ಖಾನೆಯಲ್ಲೇ ತಯಾರಿಸುವ ಚಿಂತನೆ ನಡೆದಿದೆ. ಇದಕ್ಕಾಗಿ, ಬಣ್ಣಗಳ ಉದ್ಯಮದಲ್ಲಿ ಪಳಗಿರುವ ಪರಿಣತರೊಬ್ಬರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಸಭೆಯಲ್ಲಿ ಅನುಮತಿ ನೀಡಲಾಗಿದೆ’ ಎಂದರು.

ADVERTISEMENT

‘ವೈಜ್ಞಾನಿಕವಾಗಿ ಮಾರುಕಟ್ಟೆಯನ್ನೂ ವಿಸ್ತರಿಸಿ, ಸ್ಪರ್ಧಾತ್ಮಕ ಬೆಲೆಯಲ್ಲಿ ಪೇಂಟ್ ಸಿಗುವಂತೆ ಮಾಡಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಲಾಗಿದೆ’ ಎಂದೂ ಅವರು ಮಾಹಿತಿ ನೀಡಿದರು.

ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಮಹಮದ್ ಇರ್ಫಾನ್ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.