ಬೆಂಗಳೂರು: ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಇನ್ನೂ ಸಮಯ ನಿಗದಿಯಾಗಿಲ್ಲ. ಅವರು ಇನ್ನೂ ಒಂದು ತಿಂಗಳಿಗೂ ಹೆಚ್ಚು ಸಮಯ ಕಾಯಬೇಕಾಗಿದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ‘ಪ್ರಜಾವಾಣಿ’ಗೆ ನೀಡಿರುವ ಮಾಹಿತಿಯ ಪ್ರಕಾರ, ‘ದಸರಾ ಕಳೆದ ಬಳಿಕವಷ್ಟೇ ಬಿ.ಎಸ್.ಯಡಿಯೂರಪ್ಪ ಪ್ರವಾಸ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ. ನಾನೂ ಅದರಲ್ಲಿ ಭಾಗವಹಿಸುತ್ತೇನೆ. ಪ್ರವಾಸದ ರೂಪುರೇಷೆ ಸಿದ್ಧವಾಗಬೇಕಿದೆ’ ಎಂದು ಹೇಳಿದರು.
ಪಕ್ಷದ ಸಂಘಟನೆಗಾಗಿ ರಾಜ್ಯ ಪ್ರವಾಸ ಮಾಡುವುದಾಗಿ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಿದ ಸಂದರ್ಭದಲ್ಲಿ ಯಡಿಯೂರಪ್ಪ ಪ್ರಕಟಿಸಿದ್ದೂ ಅಲ್ಲದೆ ಅದಕ್ಕಾಗಿ ಸಿದ್ಧತೆ ನಡೆಸಿದ್ದರು. ಗೌರಿ– ಗಣೇಶ ಹಬ್ಬ ಮುಗಿದ ತಕ್ಷಣವೇ ಪ್ರವಾಸ ಆರಂಭವಾಗಬೇಕಿತ್ತು. ಆದರೆ, ಪಕ್ಷದ ಅನುಮತಿ ಸಿಗಲಿಲ್ಲ. ಏಕಾಂಗಿ ರಾಜ್ಯ ಪ್ರವಾಸದ ಬದಲಿಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಜತೆ ಸೇರಿ ಪ್ರವಾಸ ನಡೆಸಬೇಕು ಎಂಬ ಸೂಚನೆ ನೀಡಿತ್ತು. ಅದಕ್ಕೆ ಯಡಿಯೂರಪ್ಪ ಅವರೂ ಒಪ್ಪಿಗೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.