ಬೆಂಗಳೂರು: ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಿಸಲಾಗಿದ್ದ ಎರಡು ಪ್ರಕರಣಗಳನ್ನು ಇಲ್ಲಿನ ಜನಪ್ರತಿನಿಧಿಗಳ ವಿಶೇಷ ವಿಚಾರಣಾ ನ್ಯಾಯಾಲಯ ವಜಾ ಮಾಡಿದೆ.
ಎರಡೂ ಪ್ರಕರಣಗಳ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಬಿ.ವಿ. ಪಾಟೀಲ ಅವರು ಯಡಿಯೂರಪ್ಪನವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿದ್ದ ತಾಲ್ಲೂಕಿನ ವಡ್ಡನಹೊಸಹಳ್ಳಿಯ ಚಿಕ್ಕಶೆಟ್ಟಿ ಕುಟುಂಬಕ್ಕೆ ಚುನಾವಣಾ ಪ್ರಚಾರದ ವೇಳೆ ಯಡಿಯೂರಪ್ಪ ₹ 1ಲಕ್ಷ ಪರಿಹಾರ ನೀಡಿದ್ದರು. ಇನ್ನೊಂದು ಪ್ರಕರಣದಲ್ಲಿ,ಭೀಮನಬೀಡು ಗ್ರಾಮದಲ್ಲಿ ಬಿಜೆಪಿಗೆ ಮತಹಾಕುವಂತೆ ಪ್ರಮಾಣ ಮಾಡಿಸಿದ್ದ ಆರೋಪ ಅವರ ಮೇಲಿತ್ತು.ಗುಂಡ್ಲುಪೇಟೆ ಠಾಣೆಯಲ್ಲಿ ಎರಡೂ ಪ್ರಕರಣಗಳಿಗೆ ಸಂಬಂಧಿಸಿದ ಎಫ್ಐಆರ್ ದಾಖಲಾಗಿದ್ದವು. ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಯಡಿಯೂರಪ್ಪ ಕೋರ್ಟ್ನಲ್ಲಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.