
ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗೆಲ್ಲಲು ಸೂಕ್ತ ಕಾರ್ಯತಂತ್ರ ರೂಪಿಸಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ಈ ಸಂಬಂಧ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಎಲ್ಲ ಜಿಲ್ಲೆಗಳ ಪ್ರಮುಖ ನಾಯಕರ ಜತೆ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ ಎಂದರು.
ರಾಜ್ಯ ಸರ್ಕಾರದ ದುರಾಡಳಿತದಿಂದ ಜನತೆ ಬೇಸತ್ತು ಹೋಗಿದ್ದಾರೆ. ಈ ಎಲ್ಲ ವಿಚಾರಗಳನ್ನು ಜನರಿಗೆ ಮನದಟ್ಟು ಮಾಡುವುದರ ಜತೆಗೆ, ಸ್ಥಳೀಯ ಸಂಸ್ಥೆ ಚುನಾವಣೆ ಗೆಲ್ಲಲು ಸಂಘಟನಾತ್ಮಕವಾಗಿ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ, ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲೂ ಗೆಲುವು ಸಾಧಿಸುವುದರ ಜತೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಬಹುಮತದೊಂದಿಗೆ ಸರ್ಕಾರ ರಚಿಸಬೇಕು ಎಂಬ ಉದ್ದೇಶದಿಂದ ಪಕ್ಷವನ್ನು ಸಂಘಟಿಸಲಾಗುತ್ತಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಅರಸುಗೆ ಹೋಲಿಸಲಾಗದು:
ದೇವರಾಜ ಅರಸು ಅವರ ಆಡಳಿತ ವೈಖರಿಯೇ ಬೇರೆ, ಸಿದ್ದರಾಮಯ್ಯ ಆಡಳಿತದ ವೈಖರಿಯೇ ಬೇರೆ. ಇವರನ್ನು ಅರಸು ಜತೆ ಹೋಲಿಸಲಾಗದು. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅರಸು ದಾಖಲೆ ಮುರಿದೆವು ಎಂಬ ಸಂಭ್ರಮದ ಸಮಾವೇಶ ಮಾಡಲು ಹೊರಟಿರುವುದನ್ನು ಜನ ಮೆಚ್ಚುವುದಿಲ್ಲ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.