ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಬಸ್ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆ ಇದೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ,‘ಡೀಸೆಲ್ ಮತ್ತು ಬಿಡಿಭಾಗಗಳ ಬೆಲೆ ಏರಿಕೆಯಿಂದ ಇಲಾಖೆಗೆ ಪ್ರತಿ ತಿಂಗಳು ₹ 15 ಕೋಟಿಗೂ ಹೆಚ್ಚುವರಿ ಹೊರೆ ಬೀಳುತ್ತಿದೆ. ಬಸ್ ಪ್ರಯಾಣ ದರ ಶೇ 15ರಷ್ಟು ಹೆಚ್ಚಿಸುವಂತೆ ಸಲ್ಲಿಸಿದ ಪ್ರಸ್ತಾವನೆಯನ್ನು ಲೋಕಸಭೆ ಚುನಾವಣೆ ಬಳಿಕ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ’ ಎಂದರು.
‘ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ’ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಇಂಥ ಬಸ್ಸುಗಳು ಪೀಣ್ಯದಿಂದ ಸಂಚರಿಸಬೇಕು ಎಂದು ಬಸ್ ನಿಲ್ದಾಣ ಮಾಡಿಕೊಟ್ಟರೂ ನಗರದ ಒಳಭಾಗದಿಂದ ಸಂಚರಿಸುವುದನ್ನು ಬಿಟ್ಟಿಲ್ಲ. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಕ್ರಮ ತೆಗೆದುಕೊಳ್ಳುತ್ತೇನೆ’ ಎಂದರು.
ಗುತ್ತಿಗೆ ರದ್ದು: ಬಿಎಂಟಿಸಿಗೆ ಖಾಸಗಿ ಸಂಸ್ಥೆಯಿಂದ ಎಲೆಕ್ಟ್ರಿಕ್ ಬಸ್ಗಳನ್ನು ಗುತ್ತಿಗೆ ಪಡೆದು ಓಡಿಸುವ ಒಪ್ಪಂದ ರದ್ದುಗೊಳಿಸಲಾಗಿದೆ. ಸಾರಿಗೆ ಸಂಸ್ಥೆಯೇ 80 ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲಿದೆ. ಈ ಬಸ್ಗಳ ಖರೀದಿಗೆ ಕೇಂದ್ರ ಸರ್ಕಾರ ₹ 75 ಕೋಟಿ ನೀಡಿದೆ. ಆದರೆ, ಖರೀದಿ ವಿಳಂಬವಾಗಿರುವ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ’ ಎಂದು ಸಚಿವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.