ಬಿ.ವೈ.ವಿಜಯೇಂದ್ರ
(ಸಂಗ್ರಹ ಚಿತ್ರ)
ಬೆಂಗಳೂರು: ‘ರಾಜ್ಯದ ವಿವಿಧ ನೀರಾವರಿ ನಿಗಮಗಳಿಗೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದ ₹1,324 ಕೋಟಿ ವಿಶೇಷ ಅನುದಾನದ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು, ನಕಲಿ ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಸಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಅನುದಾನಗಳಿಗೆ ಸಂಬಂಧಿಸಿದಂತೆ ರಾಜ್ಯ ಸಣ್ಣ ನೀರಾವರಿ ಇಲಾಖೆಯು ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕಿತ್ತು. ಆದರೆ, ಕೃಷ್ಣ ಭಾಗ್ಯ ಜಲ ನಿಗಮದ ಮೂಲಕ ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ವಿಶ್ವೇಶ್ವರಯ್ಯ ಜಲ ನಿಗಮದ ಮೂಲಕ ಎತ್ತಿನಹೊಳೆ ಯೋಜನೆಯ ಕಾಮಗಾರಿಗಳಿಗೆ ಯಶಸ್ವಿಯಾಗಿ ಹಣ ವಿನಿಯೋಗ ಮಾಡಲಾಗಿದೆ ಎಂದು ಎರಡೂ ನಿಗಮಗಳ ಮೂಲಕ ಕಾನೂನು ಬಾಹಿರವಾಗಿ ಪ್ರಮಾಣಪತ್ರ ಕೊಡಿಸಲಾಗಿದೆ’ ಎಂದು ಆಪಾದಿಸಿದರು.
‘ಕೇಂದ್ರ ಸರ್ಕಾರವು ತಾನು ನೀಡಿದ ಅನುದಾನ, ವಿಶೇಷ ಅನುದಾನಗಳಿಗೆ ಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ಸೂಚಿಸುತ್ತದೆ. ರಾಜ್ಯ ಸರ್ಕಾರವು ಈ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿದೆ. ಕೇಂದ್ರವು ಒತ್ತಡ ಹೇರಿದ ಕಾರಣಕ್ಕೆ ನಕಲಿ ಪ್ರಮಾಣ ಪತ್ರಗಳನ್ನು ಸಲ್ಲಿಸಿದೆ. ಈ ಅನುದಾನ ಎಲ್ಲಿಗೆ ಹೋಯಿತು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.